ADVERTISEMENT

ಬಿಬಿಎಂಪಿಗೆ ಚುನಾವಣೆ ನಡೆಸಿ

ನಮ್ಮ ಬೆಂಗಳೂರು ಫೌಂಡೇಶನ್‌ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2015, 20:28 IST
Last Updated 19 ಏಪ್ರಿಲ್ 2015, 20:28 IST
ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸಿ ನಮ್ಮ ಬೆಂಗಳೂರು ಫೌಂಡೇಶನ್‌ ಸದಸ್ಯರು ಪುರಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸಿ ನಮ್ಮ ಬೆಂಗಳೂರು ಫೌಂಡೇಶನ್‌ ಸದಸ್ಯರು ಪುರಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಶೀಘ್ರ ಚುನಾವಣೆ ನಡೆಸುವಂತೆ ಆಗ್ರಹಿಸಿ ನಮ್ಮ ಬೆಂಗಳೂರು ಫೌಂಡೇಶನ್‌ ಸದಸ್ಯರು ಪುರಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

ಫೌಂಡೇಶನ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಧರ್ ಪಬ್ಬಿಶೆಟ್ಟಿ ಮಾತನಾಡಿ, ‘ಬಿಬಿಎಂಪಿ ವಿಭಜನೆ ಹಿಂದೆ ಚುನಾವಣೆಯನ್ನು ಮುಂದಕ್ಕೆ ಹಾಕುವ ಹುನ್ನಾರ ಇದೆ. ರಾಜ್ಯ ಸರ್ಕಾರ ವಿಳಂಬ ಮಾಡದೆ ಕೂಡಲೇ ಬಿಬಿಎಂಪಿಗೆ ಚುನಾವಣೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಬಿಬಿಎಂಪಿಯನ್ನು ಮೂರು ಭಾಗಗಳಾಗಿ ಮಾಡಿದರೆ ಬೆಂಗಳೂರನ್ನು ಒಡೆದಂತಾಗುತ್ತದೆ. ಬಿಬಿಎಂಪಿಯನ್ನು ವಿಸರ್ಜನೆ ಮಾಡಿ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಬಿಬಿಎಂಪಿ ವಿಭಜನೆಯಿಂದ ನಗರದ ಅಭಿವೃದ್ಧಿ ಸಾಧ್ಯವಿಲ್ಲ. ಈ ಹಿಂದೆ 2008ರಿಂದ 2010ರವರೆಗೆ ಬಿಬಿಎಂಪಿಗೆ ಆಡಳಿತಾಧಿಕಾರಿಯನ್ನು ನೇಮಿಸಲಾಗಿತ್ತು. ಈ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿರಲಿಲ್ಲ ಎಂದು ದೂರಿದರು.

ಹೈಕೋರ್ಟ್‌ ಆದೇಶದಂತೆ ಮೇ 30ರ ಒಳಗೆ ಬಿಬಿಎಂಪಿಗೆ ಚುನಾವಣೆ ನಡೆಸಬೇಕು. ಹಿರಿಯ ಐಎಎಸ್‌ ಅಧಿಕಾರಿ ರಾಜೇಂದ್ರ ಕುಮಾರ್‌ ಕಠಾರಿಯಾ ಅವರು ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿರುವ ವರದಿ ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು.

ಸಿವಿಕ್‌ ಬೆಂಗಳೂರು, ಬೆಂಗಳೂರು ರೆಸಿಡೆಂಟ್ಸ್‌ ಅಸೋಸಿಯೇಷನ್ಸ್‌ ಕಾನ್ಫೆಡರೇಷನ್‌ ಎನ್ಸೆಂಬಲ್‌ (ಬ್ರೇಸ್‌) ಸಂಘಟನೆ ಸದಸ್ಯರು ಪಾಲ್ಗೊಂಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನದ ಜೊತೆ ಆಟವಾಡುವುದನ್ನು ನಿಲ್ಲಿಸಬೇಕು. ಹೈಕೋರ್ಟ್‌ ಅದೇಶದಂತೆ  ಬಿಬಿಎಂಪಿಗೆ ಚುನಾವಣೆ ನಡೆಸಬೇಕು
-ರಾಜೀವ್‌ ಚಂದ್ರಶೇಖರ್, ರಾಜ್ಯಸಭಾ ಸದಸ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.