ಬೆಂಗಳೂರು: ಬೇಸಿಗೆ ಕಾವು ಹೆಚ್ಚುತ್ತಿದ್ದು, ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಈ ಬಾರಿಯ ಕುಡಿಯುವ ನೀರಿನ ಅಭಾವ ತಲೆದೋರಿದೆ. ಕೆಲವೆಡೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲಾಗಿದ್ದರೂ, ನೀರು ಕುಡಿಯುವ ಭಾಗ್ಯ ಮಾತ್ರ ದೊರೆತಿಲ್ಲ.
ಪಾಲಿಕೆ ವ್ಯಾಪ್ತಿಯ ಕೆಲ ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸಮರ್ಪಕ ಸೌಲಭ್ಯವೂ ಇಲ್ಲ. ಇದರಿಂದಾಗಿ ಈ ಪ್ರದೇಶದ ನಿವಾಸಿಗಳು ಸಂಪೂರ್ಣವಾಗಿ ಕೊಳವೆ ಬಾವಿ ನೀರಿನ ಮೇಲೆ ಅವಲಂಬಿತರಾಗಬೇಕಾಗಿದೆ.
‘ಸದ್ಯ ಇರುವ ಬೋರ್ವೆಲ್ಗಳಿಂದಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಆದರೆ, ಬಿಸಿಲಿನ ಝಳ ಹೆಚ್ಚಾದಂತೆ ನೀರಿನ ಸಮಸ್ಯೆಯೂ ಬಿಗಡಾಯಿಸುತ್ತಿದೆ. ಕೊಳವೆ ಬಾವಿಗಳು ಕೂಡ ಬತ್ತಿ ಹೋಗುತ್ತಿವೆ. ಮುಂದಿನ ದಿನಗಳಲ್ಲಿ ನೀರಿಗಾಗಿ ಏನು ಮಾಡಬೇಕೆಂದು ತೋಚುತ್ತಿಲ್ಲ’ ಎಂದು ಹೊರಮಾವು ನಿವಾಸಿ ಆಂಜನೇಯ ತಮ್ಮ ಸಮಸ್ಯೆ ಬಿಚ್ಚಿಟ್ಟರು.
‘ಟ್ಯಾಂಕರ್ನಲ್ಲಿ ನೀರು ಪೂರೈಕೆ ಮಾಡಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ. ಆದರೆ, ನಮ್ಮ ಪ್ರದೇಶಕ್ಕೆ ಯಾವುದೇ ಟ್ಯಾಂಕರ್ ಬರುತ್ತಿಲ್ಲ. ಮುಂದಿನ ಮೂರು ತಿಂಗಳು ಇಲ್ಲಿನ ನಿವಾಸಿಗಳ ಗೋಳು ಹೇಳತೀರದು’ ಎಂದು ಅವರು ನುಡಿದರು.
ಕುಡಿಯುವ ನೀರಿನ ಪೂರೈಕೆ ಸಮಸ್ಯೆ ಸಂಬಂಧ ಇತ್ತೀಚೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಗ್ರಾಮಗಳ ನಿವಾಸಿಗಳಿಗೆ ಕುಡಿಯುವ ನೀರು ಪೂರೈಸುವಂತೆ ಬಿಬಿಎಂಪಿ ಹಾಗೂ ಜಲಮಂಡಳಿಗೆ ನಿರ್ದೇಶನ ನೀಡಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ಜಲಮಂಡಳಿ ಅಧಿಕಾರಿಯೊಬ್ಬರು, ‘ಕಾರ್ಯನಿರ್ವಹಿಸದ ಬೋರ್ವೆಲ್ಗಳನ್ನು ಸರಿಪಡಿಸುವುದು ಹಾಗೂ 30 ಸ್ಥಳಗಳಿಗೆ ಮೂರು ದಿನಗಳಿಗೊಮ್ಮೆ ಟ್ಯಾಂಕರ್ನಲ್ಲಿ ನೀರು ಪೂರೈಸುವುದು ಮಾತ್ರ ನಮ್ಮ ಕೆಲಸ’ ಎಂದಿದ್ದಾರೆ.
ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮಿನಾರಾಯಣ ಅವರು. ‘ಈ ಹಳ್ಳಿಗಳಿಗೆ ಪಾಲಿಕೆಯು ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದೆ. ಅಲ್ಲದೆ, ನೀರಿನ ಶುದ್ಧೀಕರಣ ಘಟಕಗಳ ಸ್ಥಾಪನೆಗೆ ಕ್ರಮಕೈಗೊಳ್ಳಾಗಿದೆ. ಬೇಸಿಗೆಯಲ್ಲಿ ತಲೆದೋರುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜಲಮಂಡಳಿ ಸಹಾಯದೊಂದಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.