ಹೊಸಕೋಟೆ: ‘ಬೆಂಗಳೂರು ಹಾಲು ಒಕ್ಕೂಟದಿಂದ ಹೊಸಕೋಟೆ ತಾಲ್ಲೂಕಿನಲ್ಲಿ 18 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಿದ್ದು ನೀರಿನ ಲಭ್ಯತೆ ಆಧರಿಸಿ ಇನ್ನೂ 10 ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ’ ಎಂದು ಒಕ್ಕೂಟದ ನಿರ್ದೇಶಕ ಸಿ.ಮಂಜುನಾಥ್ ಹೇಳಿದರು.
ಬುಧವಾರ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಒಕ್ಕೂಟದ ವತಿಯಿಂದ ಸ್ಥಾಪಿಸಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಒಕ್ಕೂಟದ ಅಧ್ಯಕ್ಷ ಅಪ್ಪಯ್ಯಣ್ಣ ಮಾತನಾಡಿ, ‘ಒಕ್ಕೂಟ ಗಳಿಸಿದ ಲಾಭಾಂಶದಲ್ಲಿ ಗ್ರಾಮಗಳಲ್ಲಿನ ಸಾರ್ವಜನಿಕರಿಗೆ ನೆರವಾಗುವಲ್ಲಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಶಾಲೆಗಳಿಗೆ ಬೇಕಾದ ಮೂಲ ಸೌಲಭ್ಯಗಳನ್ನು ನೀಡುತ್ತಿದೆ. ಅಲ್ಲದೆ ಸದಸ್ಯರ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಕಾರ್ಯಕ್ರಮ ಸಹ ಜಾರಿಗೆ ತಂದಿದೆ’ ಎಂದರು.
ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಸಹಕಾರ ಸಂಘದ ಅಧ್ಯಕ್ಷ ಟಿ.ಎ.ನಟರಾಜ್ ಇದ್ದರು.