ಬೆಂಗಳೂರು: ರಾಜರಾಜೇಶ್ವರಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಗೌಡ ಅವರ ಮನೆ ಮೇಲೆ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ಭಾನುವಾರ ಸಂಜೆ ದಾಳಿ ನಡೆಸಿದ್ದಾರೆ.
ನಾಗರಬಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಇರುವ ರವಿ ಗೌಡ ಅವರ ಮನೆಗೆ ಸಂಜೆ 4 ಗಂಟೆ ಸುಮಾರಿಗೆ ಬಂದ ಅಧಿಕಾರಿಗಳ ತಂಡ, ರಾತ್ರಿ 8.30 ವರೆಗೂ ಶೋಧ ನಡೆಸಿದೆ. ಕೆಲವು ಮಹತ್ವದ ದಾಖಲೆಗಳು ಮತ್ತು ಬ್ಯಾಂಕು ಖಾತೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.
‘ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ. ಕ್ಷೇತ್ರದ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಈ ದಾಳಿ ನಡೆಸಿದೆ’ ಎಂದು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
‘ಚುನಾವಣಾ ಆಯೋಗದ ಮೂಲಕ ಬಿಜೆಪಿ ಈ ರೀತಿ ಮಾಡಿದೆ’ ಎಂದು ಶಿವಕುಮಾರ್ ಸಹೋದರ ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.
ಭಾನುವಾರ ರಾತ್ರಿ ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಾಳಿ ವೇಳೆ ₹ 3 ಕೋಟಿ ಹಣ ಸಿಕ್ಕಿದೆ ಎಂದು ಆರೋಪ ಸುಳ್ಳು. ಮತದಾರರ ಮನಸ್ಸು ಕೆಡಿಸಲು ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ’ ಎಂದೂ ದೂರಿದರು.
ಆಯೋಗಕ್ಕೆ ದೂರು
ಮತದಾನ ನಡೆಯುವುದಕ್ಕೆ ಕೇವಲ ಎಂಟು ಗಂಟೆಗಳಿರುವಾಗ ಕಾಂಗ್ರೆಸ್ ನಡೆಸಿದ ತುರ್ತು ಮಾಧ್ಯಮಗೋಷ್ಠಿಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
‘ಈಗ ಮಾಧ್ಯಮಗೋಷ್ಠಿ ನಡೆಸುವುದು ಕಾನೂನಿಗೆ ವಿರುದ್ಧವಾದ್ದದ್ದು, ಅದು ನಿಜವಾದರೆ, ಆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು‘ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾ ಉಸ್ತುವಾರಿ ಅಧಿಕಾರಿ ನಳಿನ್ ಅತುಲ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.