ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಸದಸ್ಯೆ ಮಂಗಳಾ ಶ್ರೀಧರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಅಧೀನ ನ್ಯಾಯಾಲಯದಲ್ಲಿ ದಾಖಲಿಸಲಾಗಿದ್ದ ದೂರಿನ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.
ಪ್ರಕರಣ ರದ್ದು ಕೋರಿ ಮಂಗಳಾ ಶ್ರೀಧರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆನಂದ ಬೈರಾರೆಡ್ಡಿಅವರಿದ್ದ ಏಕಸದಸ್ಯ ಪೀಠವು ಪುರಸ್ಕರಿಸಿದೆ.
‘ಅಗತ್ಯವಿದ್ದರೆ ಸಿಐಡಿ ಅಧಿಕಾರಿಗಳು ರಾಷ್ಟ್ರಪತಿಯಿಂದ ಅರ್ಜಿದಾರರ ವಿರುದ್ಧ ಪ್ರಾಸಿಕ್ಯೂಷನ್ಗೆ ಪೂರ್ವಾನುಮತಿ ಪಡೆದು ಪ್ರಕರಣ ಮುಂದುವರಿಸಬಹುದು’ ಎಂದು ನ್ಯಾಯಪೀಠ ಇದೇ ವೇಳೆ ಸ್ಪಷ್ಟಪಡಿಸಿದೆ.
‘2011ನೇ ಸಾಲಿನ ‘ಎ’ ಮತ್ತು ‘ಬಿ’ ವೃಂದದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವೇಳೆ ಮಂಗಳಾ ಶ್ರೀಧರ್ ಅಕ್ರಮ ನಡೆಸಿದ್ದಾರೆ’ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವತಿಯಿಂದ ದೂರು ದಾಖಲಿಸಲಾಗಿತ್ತು.
‘ನನ್ನ ವಿರುದ್ಧದ ವಿಚಾರಣೆಗೆ ರಾಷ್ಟ್ರಪತಿಯಿಂದ ಪೂರ್ವಾನುಮತಿ ಪಡೆಯಬೇಕು. ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಪ್ರಕರಣ ರದ್ದುಪಡಿಸಬೇಕು’ ಎಂದು ಮಂಗಳಾ ಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.