ADVERTISEMENT

ಮೂಲಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

ಗಿರಿಜನ ಆಶ್ರಮ ಶಾಲೆಗಳಿಗೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2014, 19:46 IST
Last Updated 20 ನವೆಂಬರ್ 2014, 19:46 IST

ಬೆಂಗಳೂರು: ನವೋದಯ ವಸತಿ ಶಾಲೆಗಳ ಮಾದರಿಯಲ್ಲಿ ಗಿರಿಜನ ಆಶ್ರಮ ಶಾಲೆಗಳಿಗೆ ಮೂಲ ಸೌಕರ್ಯ ಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ಸದಸ್ಯರು ನಗರದ ಪುರಭವನದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಒಕ್ಕೂಟದ ಸದಸ್ಯ ಗುಣಪಾಲ, ‘ರಾಜ್ಯದಲ್ಲಿ 116 ಆಶ್ರಮ ಶಾಲೆಗಳಿವೆ. ಅವುಗಳಲ್ಲಿ 11,152 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಅಗತ್ಯ ಮೂಲಸೌಕರ್ಯಗಳಿಲ್ಲ’ ಎಂದು ದೂರಿದರು.

ಶಾಲೆಗಳಿಗೆ ಕಾಯಂ ಶಿಕ್ಷಕರನ್ನು ನೇಮಿಸಿ ಕನಿಷ್ಠ ವೇತನ ನಿಗದಿಪಡಿಸ ಬೇಕು. ಶಾಲೆಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ  ವ್ಯಾಪ್ತಿಗೆ ಒಳಪಡಿಸಬೇಕು.

ಪೌಷ್ಟಿಕ ಆಹಾರ ಒದಗಿಸಲು ಪ್ರತಿ ವಿದ್ಯಾರ್ಥಿಗೆ ಮಾಸಿಕ ₨ 2,500 ಅನುದಾನ ನೀಡಬೇಕು. ಈಗಾಗಲೇ ಆಶ್ರಮ ಶಾಲೆಗಳಲ್ಲಿ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ಸೇವಾ ಹಿರಿತನದ ಆಧಾರದ ಮೇಲೆ ಕಾಯಂ ಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.