ಬೆಂಗಳೂರು: ಕೆಂಗೇರಿ ಸಮೀಪದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಮಂಗಳವಾರ ರಾತ್ರಿ ರೌಡಿಶೀಟರ್ ನಾಗೇಂದ್ರ ಅಲಿಯಾಸ್ ನಾಮ (24) ಎಂಬಾತನ ಮೇಲೆ ಬ್ಯಾಟರಾಯನಪುರ ಪೊಲೀಸರು ಗುಂಡು ಹಾರಿಸಿದ್ದಾರೆ.
‘ಘಟನೆಯಲ್ಲಿ ನಾಗೇಂದ್ರನ ಕಾಲಿಗೆ ಗುಂಡು ತಗುಲಿದ್ದು, ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಬ್ಯಾಟರಾಯನಪುರ ಇನ್ಸ್ಪೆಕ್ಟರ್ ಪಿ.ಟಿ.ಶಿವಸ್ವಾಮಿ ಹಾಗೂ ಕಾನ್ಸ್ಟೆಬಲ್ ನವೀನ್ ಎಂಬುವರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಮಾಹಿತಿ ನೀಡಿದರು.
‘ಚಾಮರಾಜಪೇಟೆಯ ರೌಡಿಶೀಟರ್ ಆಗಿದ್ದ ನಾಗೇಂದ್ರನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ 14ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಎರಡು ಕೊಲೆ, ಮೂರು ಕೊಲೆ ಯತ್ನ, ಆರು ಸುಲಿಗೆ ಪ್ರಕರಣಗಳಿವೆ.’
‘ಈತ ಡಕಾಯಿತಿ ಪ್ರಕರಣವೊಂದರಲ್ಲಿ ಬ್ಯಾಟರಾಯನಪುರ ಪೊಲೀಸರಿಗೆ ಬೇಕಿದ್ದ. ವಿಶ್ವೇಶ್ವರಯ್ಯ ಬಡಾವಣೆಯಲ್ಲಿರುವ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದರು. ಆದರೆ, ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದ.
ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಶಿವಸ್ವಾಮಿ ತಮ್ಮ ಸರ್ವೀಸ್ ಪಿಸ್ತೂಲ್ನಿಂದ ಎರಡು ಸುತ್ತು ಗುಂಡು ಹಾರಿಸಿದ್ದಾರೆ’ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.