ADVERTISEMENT

ವಕೀಲರ ಪರಿಷತ್‌ ಚುನಾವಣೆ: ಮತ ಎಣಿಕೆಗೆ ತಡೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 19:30 IST
Last Updated 5 ಏಪ್ರಿಲ್ 2018, 19:30 IST

ಬೆಂಗಳೂರು: ರಾಜ್ಯ ವಕೀಲರ ಪರಿಷತ್‌ನ 25 ಪದಾಧಿಕಾರಿಗಳ ಆಯ್ಕೆಗೆ ಕಳೆದ ತಿಂಗಳ 27ರಂದು ನಡೆದ ಚುನಾವಣೆಯ ಮತ ಎಣಿಕೆಗೆ ಭಾರತೀಯ ವಕೀಲರ ಪರಿಷತ್‌ ಚುನಾವಣಾ ನ್ಯಾಯಮಂಡಳಿ ಮಧ್ಯಂತರ ತಡೆ ನೀಡಿದೆ.

‘ಚುನಾವಣೆ ಕ್ರಮಬದ್ಧವಾಗಿ ನಡೆದಿಲ್ಲ ಹಾಗೂ ಮತ ಎಣಿಕೆಗೆ ಸರಿಯಾದ ಪೂರ್ವ ಸಿದ್ಧತೆ ಇಲ್ಲ’ ಎಂದು ಆಕ್ಷೇಪಿಸಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದ ದುರ್ಗಾಪ್ರಸಾದ್‌ ಎಂಬುವರು ಸಲ್ಲಿಸಿದ್ದ ಅರ್ಜಿ ಆಧರಿಸಿ ಈ ತಡೆ ನೀಡಲಾಗಿದೆ.

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನೇತೃತ್ವದ ನ್ಯಾಯಮಂಡಳಿ ಈ ಅರ್ಜಿಯ ವಿಚಾರಣೆ ನಡೆಸಿ ಚುನಾವಣಾ ಅಧಿಕಾರಿಗೆ ನೋಟಿಸ್‌ ಜಾರಿಗೆ ಆದೇಶಿಸಿದೆ. ಅಂತೆಯೇ ಮತ ಎಣಿಕೆ ಪೆಟ್ಟಿಗೆಗಳನ್ನು ಪರಿಶೀಲಿಸಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆಯೂ ನಿರ್ದೇಶಿಸಲಾಗಿದೆ. ಈ ಸಂಬಂಧ ವೀಕ್ಷಕರನ್ನಾಗಿ ನಿವೃತ್ತ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರನ್ನು ನೇಮಿಸಿ ನ್ಯಾಯಮಂಡಳಿ ಆದೇಶಿಸಿದೆ.

ADVERTISEMENT

ಪರಿಶೀಲನೆ: ನ್ಯಾಯಮಂಡಳಿ ನಿರ್ದೇಶನದ ಅನುಸಾರ ಆನಂದ ಬೈರಾರೆಡ್ಡಿ ಅವರು ಗುರುವಾರ ಪರಿಷತ್‌ ಕಚೇರಿಗೆ ಬಂದು ಚುನಾವಣಾ ಅಧಿಕಾರಿಯೂ ಆದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎ.ಜಿ.ಶಿವಣ್ಣ ಅವರನ್ನು ಭೇಟಿ ಮಾಡಿ ವಿವರ ಪಡೆದರು. ಅಂತೆಯೇ ಮತಪಟ್ಟಿಗೆ ಇರಿಸಿರುವ ಸ್ಥಳ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.