ADVERTISEMENT

‘ಶಿಕ್ಷಣದ ಗುಣಮಟ್ಟ ಕುಸಿತ’

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2017, 19:56 IST
Last Updated 16 ಮಾರ್ಚ್ 2017, 19:56 IST
ರಾಮಾ ಜೋಯಿಸ್ ಅವರು ಬಸವಮೂರ್ತಿ ಸ್ವಾಮೀಜಿ  ಅವರೊಂದಿಗೆ ಸಂಭಾಷಣೆ ನಡೆಸಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್ ಮತ್ತು ಕೆ.ಎನ್.ನಿಂಗೇಗೌಡ ಅವರು ಇದ್ದಾರೆ.
ರಾಮಾ ಜೋಯಿಸ್ ಅವರು ಬಸವಮೂರ್ತಿ ಸ್ವಾಮೀಜಿ ಅವರೊಂದಿಗೆ ಸಂಭಾಷಣೆ ನಡೆಸಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್ ಮತ್ತು ಕೆ.ಎನ್.ನಿಂಗೇಗೌಡ ಅವರು ಇದ್ದಾರೆ.   

ಬೆಂಗಳೂರು: ‘ದೇಶದಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಮಾನವೀಯ ಹಾಗೂ ನೈತಿಕ ಮೌಲ್ಯಗಳು ಕ್ಷೀಣಿಸಿವೆ’ ಎಂದು  ಹರಿಯಾಣ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ರಾಮಾ ಜೋಯಿಸ್‌ ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗವು ಗುರುವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ‘ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಇಂದಿಗೂ ಸುಧಾರಣೆ ಆಗಿಲ್ಲ. ಉನ್ನತ ಶಿಕ್ಷಣವು ಕೆಳಮಟ್ಟಕ್ಕೆ ಇಳಿದಿದೆ. ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ’  ಎಂದರು.

‘ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ನೈತಿಕ ಮತ್ತು ಜೀವನ ಕೌಶಲದ ಬಗ್ಗೆ ಬೋಧನೆ ಮಾಡಬೇಕು. ಸತ್ಯ, ಧರ್ಮ, ಶಾಂತಿ, ಪ್ರೀತಿ ಮತ್ತು ಅಹಿಂಸೆಯ ಮಾರ್ಗದಲ್ಲಿ ವಿದ್ಯಾರ್ಥಿಗಳು ನಡೆಯಬೇಕು’ ಎಂದು ಹೇಳಿದರು.

ಚಿತ್ರದುರ್ಗದ ಮಾದಾರ ಚೆನ್ನಯ್ಯ ಪೀಠದ ಬಸವಮೂರ್ತಿ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿಗಳು ಉನ್ನತಮಟ್ಟಕ್ಕೆ ತಲುಪಬೇಕಾದರೆ ಬೋಧಕರ ಮಾರ್ಗದರ್ಶನ,  ಪ್ರೋತ್ಸಾಹ ಮತ್ತು ಪ್ರೇರಣೆ ಮುಖ್ಯ. ವಿದ್ಯಾರ್ಥಿಗಳು ತಮಗೆ ಇಷ್ಟದ ಕ್ಷೇತ್ರದಲ್ಲಿ ಸಾಧನೆ ಮಾಡಲು ಪೋಷಕರು ಅವಕಾಶ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.

ಬೆಂಗಳೂರು ವಿ.ವಿ. ಕುಲಸಚಿವ ಕೆ.ಎನ್.ನಿಂಗೇಗೌಡ ಮಾತನಾಡಿ, ‘ಪ್ರಾಧ್ಯಾಪಕರು ಪಠ್ಯಕ್ರಮಕ್ಕೆ ಮಾತ್ರ ಸೀಮಿತವಾಗಬಾರದು. ಸಮಾಜದಲ್ಲಿ ನಿತ್ಯ ನಡೆಯುವ ಘಟನೆಗಳು ಮತ್ತು ವಿಚಾರಗಳ ಬಗ್ಗೆ ತಿಳಿದುಕೊಳ್ಳಬೇಕು. ತಮ್ಮಲ್ಲಿರುವ ಬೋಧನಾ ಸಾಮರ್ಥ್ಯವನ್ನು ಬಳಸಿಕೊಂಡು ಸರಳ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.