ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಶೌಚಾಲಯ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯ ಕಲ್ಪಿಸುವುದಕ್ಕೆ ನೆರವು ನೀಡಲು ಇನ್ಫೊಸಿಸ್ ಪ್ರತಿಷ್ಠಾನ ಮುಂದಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಶಾಸಕ ರಮೇಶ್ ಕುಮಾರ್ ಹಾಗೂ ಇಲಾಖೆ ಅಧಿಕಾರಿಗಳು ಶುಕ್ರವಾರ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಭೇಟಿಯಾಗಿ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸುಧಾಮೂರ್ತಿ, ಅಗತ್ಯ ನೆರವಿನ ಭರವಸೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದ ಕಿಮ್ಮನೆ ರತ್ನಾಕರ ಅವರು ಸುದ್ದಿಗಾರರ ಜತೆ ಮಾತನಾಡಿ, ‘ಸಾವಿರಾರು ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಕಟ್ಟಡಗಳ ದುರಸ್ತಿ, ಕುಡಿಯುವ ನೀರಿನ ವ್ಯವಸ್ಥೆ, ಶಾಚಾಲಯಗಳ ಅವಶ್ಯಕತೆ ಇದೆ. ಈ ಸೌಕರ್ಯಗಳಿಗಾಗಿ ನೆರವು ನೀಡುವಂತೆ ಮಾಡಿಕೊಂಡ ಮನವಿಗೆ ಸುಧಾಮೂರ್ತಿ ಸ್ಪಂದಿಸಿದ್ದಾರೆ’ ಎಂದರು.
ಪಿಯು ಕಾಲೇಜುಗಳಿಗೆ ಶೌಚಾಲಯ: ‘ಶೌಚಾಲಯಗಳಿಲ್ಲದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಿ ಕೊಡಲು ಪ್ರತಿಷ್ಠಾನ ಒಪ್ಪಿದೆ. ಇದಕ್ಕೆ ಸಂಬಂಧಿಸಿದ ಪೂರ್ಣ ಮಾಹಿತಿಗಳನ್ನು ಶೀಘ್ರವಾಗಿ ಅವರಿಗೆ ನೀಡಲಿದ್ದೇವೆ. ಈ ಯೋಜನೆಯ ಅನುಷ್ಠಾನದ ಪೂರ್ಣ ಜವಾಬ್ದಾರಿಯನ್ನು ಪ್ರತಿಷ್ಠಾನ ಹೊರಲಿದೆ’ ಎಂದರು.
ಕಂಪೆನಿಗಳೊಂದಿಗೆ ಒಪ್ಪಂದ: ‘ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ, ಜಿಂದಾಲ್, ಟೊಯೊಟಾ, ಪ್ರೆಸ್ಟೀಜ್ನಂತಹ ಕಂಪೆನಿಗಳು, ರೌಂಡ್ ಟೇಬಲ್ ಇಂಡಿಯಾದಂತಹ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.