ಬೆಂಗಳೂರು: ‘ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡವರಿಗೆ ₹1 ಕೋಟಿ ಮೊತ್ತದ ಪರಿಹಾರ ನೀಡುವಂತೆ ಲಿಷಾ ಸಲ್ಲಿಸಿರುವ ಮನವಿ ಪರಿಶೀಲಿಸಿ’ ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಏಕಸದಸ್ಯ ನೀಡಿರುವ ನಿರ್ದೇಶನವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯ ಸಲ್ಲಿಸಿರುವ ಈ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ, ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣದ ಗಾಯಾಳು ಲಿಷಾ ಹಾಗೂ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.
ನಗರದ ಮಲ್ಲೇಶ್ವರದ 11ನೇ ಕ್ರಾಸ್ನ ಬಿಜೆಪಿ ಕಚೇರಿ ಮುಂಭಾಗ 2013ರ ಏಪ್ರಿಲ್ 17ರಂದು ಬೆಳಿಗ್ಗೆ 10.30ಕ್ಕೆ ಬಾಂಬ್ ಸ್ಫೋಟ ನಡೆದಿತ್ತು. ಈ ವೇಳೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಲಿಷಾ ಮತ್ತು ಅವರ ಸಹಪಾಠಿ ರಕ್ಷಿತಾ ಗಾಯಗೊಂಡಿದ್ದರು. ಲಿಷಾ ಬಲಗಾಲಿಗೆ ಗಂಭೀರ ಪೆಟ್ಟಾಗಿ ಒಂಬತ್ತು ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.