ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು 2006ರ ಮಾದರಿಯ ಸಿಇಟಿ ಕಾಯ್ದೆ ಜಾರಿಗೊಳಿಸುವ ಸಂಬಂಧ ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲೇ ಮಸೂದೆ ಮಂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಕಳೆದ ವಾರ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದು, ಮಸೂದೆಯನ್ನು ಪರಿಷ್ಕರಿಸುವ ಸಂಬಂಧ ಚರ್ಚಿಸಿದ್ದಾರೆ. ಮಾರ್ಚ್ ಮೊದಲ ವಾರದ ಅಂತ್ಯದೊಳಗೆ ಮಸೂದೆಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.
ಬಜೆಟ್ ಅಧಿವೇಶನದಲ್ಲಿ ಮಸೂದೆಗೆ ಒಪ್ಪಿಗೆ ಪಡೆದರೆ ಮಾತ್ರ ಮುಂದಿನ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ಸಾಧ್ಯ. ಇಲ್ಲವಾದರೆ ಹಳೆಯ ವ್ಯವಸ್ಥೆಯನ್ನು ಮುಂದುವರಿಸುವುದು ಅನಿವಾರ್ಯ ಆಗುತ್ತದೆ. ಈ ಕಾರಣದಿಂದ ಬಜೆಟ್ ಅಧಿವೇಶನದಲ್ಲೇ ಮಸೂದೆ ಮಂಡಿಸಿ, ಒಪ್ಪಿಗೆ ಪಡೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಏಮ್ಸ್ ನಿರೀಕ್ಷೆ: ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಮಾದರಿಯ ಸಂಸ್ಥೆಯನ್ನು ರಾಜ್ಯದಲ್ಲೂ ಸ್ಥಾಪಿಸುವ ಕುರಿತು ಕೇಂದ್ರ ಸರ್ಕಾರ ಇನ್ನೂ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಈ ವಿಷಯದಲ್ಲಿ ಕೇಂದ್ರದ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದರು.
ರಾಜ್ಯದ ಯಾವುದೇ ಸ್ಥಳದಲ್ಲಿ ಏಮ್ಸ್ ಸ್ಥಾಪನೆಗೆ ಮುಂದಾದರೂ ರಾಜ್ಯ ಸರ್ಕಾರ ಅಗತ್ಯ ವಿಸ್ತೀರ್ಣದ ಜಮೀನು ಒದಗಿಸಲಿದೆ. ನಾಲ್ಕು ಸ್ಥಳಗಳನ್ನು ರಾಜ್ಯ ಸರ್ಕಾರ ಸೂಚಿಸಿತ್ತು. ಆದರೆ, ಅಂತಿಮ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಬೇಕು ಎಂದು ತಿಳಿಸಿದರು.
ಹಿಂದೆ ಘೋಷಿಸಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆ ಆದ್ಯತೆ ನೀಡಲಿದೆ. ಈ ಬಾರಿಯ ಬಜೆಟ್ನಲ್ಲಿ ಯಾವುದೇ ಹೊಸ ಕಾರ್ಯಕ್ರಮ ಘೋಷಣೆಗೆ ಬೇಡಿಕೆ ಇರಿಸಿಲ್ಲ. ಕೇಂದ್ರ ಸರ್ಕಾರದಿಂದ ಹೆಚ್ಚಿನ ಘೋಷಣೆ ನಿರೀಕ್ಷಿಸಲಾಗುತ್ತಿದೆ. ಬಳ್ಳಾರಿ, ಹುಬ್ಬಳ್ಳಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಮಂಡ್ಯ ಮತ್ತು ಕಲಬುರ್ಗಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳ ಆರಂಭದ ಘೋಷಣೆಯನ್ನು ಕೇಂದ್ರ ಸರ್ಕಾರ ಇನ್ನೂ ಈಡೇರಿಸಿಲ್ಲ ಎಂದರು.
ಕಾರ್ಮಿಕರ ರಾಜ್ಯ ವಿಮಾ ನಿಗಮದ (ಇಎಸ್ಐಸಿ) ವೈದ್ಯಕೀಯ ಕಾಲೇಜುಗಳನ್ನು ಕಟ್ಟಡ ಮತ್ತು ಮೂಲಸೌಕರ್ಯದ ಸಮೇತ ಉಚಿತವಾಗಿ ಹಸ್ತಾಂತರ ಮಾಡುವುದಾದರೆ ಮಾತ್ರ ನಿರ್ವಹಣೆಗೆ ಸಿದ್ಧ ಎಂಬ ಪ್ರಸ್ತಾವವನ್ನು ಕೇಂದ್ರ ಕಾರ್ಮಿಕ ಸಚಿವಾಲಯದ ಮುಂದಿಡಲಾಗಿದೆ. ಇದುವರೆಗೆ ಯಾವ ಪ್ರತಿಕ್ರಿಯೆಯೂ ಬಂದಿಲ್ಲ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.