ಬೆಂಗಳೂರು: ‘ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಘಟಕದಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಲು ಸಾಧ್ಯವಾಗಲಿಲ್ಲ ಎಂಬ ಕೊರಗು ನನ್ನಲ್ಲಿದೆ’ ಎಂದು ನಿವೃತ್ತಿ ಅಂಚಿನಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮ ಪಚಾವೊ ಬೇಸರ ವ್ಯಕ್ತಪಡಿಸಿದರು.
ಕೋರಮಂಗಲದ ಕವಾಯತು ಮೈದಾನದಲ್ಲಿ ಶುಕ್ರವಾರ ಬೀಳ್ಕೊಡುಗೆ ಸಮಾರಂಭದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
‘ರಾಜ್ಯ ಪೊಲೀಸ್ ಇಲಾಖೆಯ ಸಾರಥಿ ಆಗಿ 2 ವರ್ಷ 9 ತಿಂಗಳು ಕೆಲಸ ಮಾಡಿದ್ದೇನೆ. ಕಾರ್ಯ ವೈಖರಿ ತೃಪ್ತಿ ತಂದಿದೆ. ಶಾಲಾ ಮಕ್ಕಳ ಮೇಲಿನ ಅತ್ಯಾಚಾರ, ಮಲ್ಲೇಶ್ವರ ಸ್ಫೋಟ ಸೇರಿದಂತೆ ವೃತ್ತಿ ಜೀವನದಲ್ಲಿ ಸವಾಲೆನಿಸಿದ್ದ ಬಹುತೇಕ ಪ್ರಕರಣಗಳನ್ನು ಭೇದಿಸಿದ್ದೇವೆ. ಆದರೆ, ಎಟಿಎಂ ಘಟಕದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವನನ್ನು ಪತ್ತೆ ಮಾಡಲು ಆಗಲಿಲ್ಲ. ಹೊಸ ಡಿಜಿಪಿ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಆ ಆರೋಪಿಯನ್ನು ಬಂಧಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಆದರೆ, ಮೇಲಿಂದ ಮೇಲೆ ಜರುಗಿದ ಅತ್ಯಾಚಾರ ಪ್ರಕರಣಗಳಂಥ ಹೀನ ಕೃತ್ಯಗಳನ್ನು ತಡೆಯುವುದು ಸವಾಲಾಯಿತು’ ಎಂದರು.
‘ಮುಖ್ಯಮಂತ್ರಿ, ಗೃಹಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳು ಕರ್ತವ್ಯಕ್ಕೆ ಬೆಂಬಲವಾಗಿದ್ದರು. ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದಲೂ ಉತ್ತಮ ಸಹಕಾರ ದೊರೆತಿದೆ. ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಇಲಾಖೆಯನ್ನು ಹೊಸ ಡಿಜಿಪಿಗಳು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ’ ಎಂದ ಪಚಾವೊ, ‘ನಿವೃತ್ತಿ ಬಳಿಕ ಬೆಂಗಳೂರಿನಲ್ಲೆ ಉಳಿಯುವ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.