ADVERTISEMENT

‘ಕಾರ್ಗಿಲ್‌ ವಿಜಯ ದಿವಸ’ ಆಚರಣೆ

ಸಿಎಂ ಸಿದ್ದರಾಮಯ್ಯ, ಗಣ್ಯರಿಂದ ಗೌರವ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2016, 19:47 IST
Last Updated 26 ಜುಲೈ 2016, 19:47 IST
ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಯೋಧರು ಗೌರವ ಸಮರ್ಪಣೆ ಮಾಡಿದರು –ಪ್ರಜಾವಾಣಿ ಚಿತ್ರ
ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಯೋಧರು ಗೌರವ ಸಮರ್ಪಣೆ ಮಾಡಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್‌ಮೆಂಟ್‌ ಟ್ರಸ್ಟ್‌ ವತಿಯಿಂದ ನಗರದ ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನದಲ್ಲಿರುವ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಮಂಗಳವಾರ ‘ಕಾರ್ಗಿಲ್‌ ವಿಜಯ ದಿವಸ’ ಆಚರಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ, ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ, ವಿಧಾನ ಪರಿಷತ್‌ ಸದಸ್ಯ ಗಣೇಶ್‌ ಕಾರ್ಣಿಕ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್‌ ಜಾಧವ್‌ ಸೇರಿದಂತೆ ಭೂಸೇನೆ, ವಾಯುಪಡೆ, ನೌಕಾಪಡೆಗಳ ಹಿರಿಯ ಅಧಿಕಾರಿಗಳು ಸೈನಿಕ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿದರು.

ಸಮಾರಂಭದಲ್ಲಿ ಮೂರೂ ಸೇನೆಗಳ ಯೋಧರು, ನಿವೃತ್ತ ಸೇನಾಧಿಕಾರಿಗಳು, ಹುತಾತ್ಮ ಯೋಧರ ಕುಟುಂಬದ ಸದಸ್ಯರು, ಸ್ಕೌಟ್ಸ್ ಮತ್ತು ಗೈಡ್ಸ್‌, ಎನ್‌ಸಿಸಿ ಕೆಡೆಟ್‌ಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಹುತಾತ್ಮ ಯೋಧರಿಗೆ ಗೌರವ ಅರ್ಪಿಸಿದರು.

ಚಿಕ್ಕಮಗಳೂರು ಹಾಗೂ ಮೈಸೂರಿನ ಏಕಲ್‌ ವಿದ್ಯಾಲಯದ 40 ವಿದ್ಯಾರ್ಥಿಗಳು ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ‘ಇದು ನಮ್ಮ ದೇಶ’ ಎಂಬ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಕಾರ್ಗಿಲ್‌ ಯುದ್ಧದಲ್ಲಿ ಪಾಕಿಸ್ತಾನಿಗಳನ್ನು ಸದೆಬಡಿದು, ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ಬಿಡಿಸಿಕೊಳ್ಳಲಾಯಿತು.

ಈ ಹೋರಾಟದಲ್ಲಿ ಭಾರತದ 527 ಸೈನಿಕರು ಹುತಾತ್ಮರಾದರು. ಅವರನ್ನು ಸ್ಮರಣೆ ಮಾಡಿಕೊಳ್ಳುವ ದಿವಸವಿದು. ಅವರನ್ನಷ್ಟೇ ಅಲ್ಲದೆ ದೇಶಕ್ಕಾಗಿ ಪ್ರಾಣ ಬಿಟ್ಟ ಎಲ್ಲ ಸೈನಿಕರನ್ನು ಸ್ಮರಿಸಿಕೊಳ್ಳುವ ದಿನವಿದು’ ಎಂದರು.

ಅಂಚೆ ಲಕೋಟೆ ಬಿಡುಗಡೆ
ಫ್ಲಾಗ್ಸ್‌ ಆಫ್‌ ಹಾನರ್‌ ಫೌಂಡೇಷನ್‌ ಸಹಯೋಗದಲ್ಲಿ ಕಾರ್ಗಿಲ್‌ ದಿವಸದ ಪ್ರಯುಕ್ತ ಹೊರತಂದಿರುವ ವಿಶೇಷ ಅಂಚೆ ಲಕೋಟೆಯನ್ನು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.