ADVERTISEMENT

‘ಮೀರ್‌ ಸಾಧಿಕ್’ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2016, 19:46 IST
Last Updated 9 ಫೆಬ್ರುವರಿ 2016, 19:46 IST
ಶಾಸಕ ಜಮೀರ್ ಅಹಮದ್ ಅವರನ್ನು ಜೆಡಿಎಸ್‌ ರಾಷ್ಟ್ರೀಯ ಅದ್ಯಕ್ಷ ಎಚ್‌.ಡಿ. ದೇವೇಗೌಡ ಅವರು ‘ಮೀರ್ ಸಾಧಿಕ್’ ಎಂದು ಕರೆದಿದ್ದನ್ನು ಖಂಡಿಸಿ, ಮೌಲ್ವಿಗಳು ಮತ್ತು ವಿವಿಧ ಮುಸ್ಲಿಂ ಸಂಘಟನೆಗಳ ಸದಸ್ಯರು ನಗರದ ಪುರಭವನದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು    –ಪ್ರಜಾವಾಣಿ ಚಿತ್ರ
ಶಾಸಕ ಜಮೀರ್ ಅಹಮದ್ ಅವರನ್ನು ಜೆಡಿಎಸ್‌ ರಾಷ್ಟ್ರೀಯ ಅದ್ಯಕ್ಷ ಎಚ್‌.ಡಿ. ದೇವೇಗೌಡ ಅವರು ‘ಮೀರ್ ಸಾಧಿಕ್’ ಎಂದು ಕರೆದಿದ್ದನ್ನು ಖಂಡಿಸಿ, ಮೌಲ್ವಿಗಳು ಮತ್ತು ವಿವಿಧ ಮುಸ್ಲಿಂ ಸಂಘಟನೆಗಳ ಸದಸ್ಯರು ನಗರದ ಪುರಭವನದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರು, ಶಾಸಕ ಜಮೀರ್ ಅಹಮದ್ ಅವರನ್ನು, ‘ಮೀರ್ ಸಾಧಿಕ್’ ಎಂದು ಕರೆದಿದ್ದನ್ನು ಖಂಡಿಸಿ, ಮೌಲ್ವಿಗಳು ಹಾಗೂ ವಿವಿಧ ಮುಸ್ಲಿಂ ಸಂಘಟನೆಗಳ ಸದಸ್ಯರು ನಗರದ ಪುರಭವನದ ಎದುರು ಮಂಗಳವಾರ ಪ್ರತಿಭಟನೆ
ನಡೆಸಿದರು.

ಜಮೀರ್ ಅವರ ವಿರುದ್ಧದ ಹೇಳಿಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಶೋಭೆ ತರುವುದಿಲ್ಲ. ಕೂಡಲೇ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ದೇವೇಗೌಡರ ಪ್ರತಿಕೃತಿ ದಹಿಸಿದರು.

ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಸಮುದಾಯಕ್ಕೆ ಹೆಚ್ಚಿನ ಕೊಡುಗೆ ನೀಡಿರುವ ಜಮೀರ್ ಅವರು, ಜೆಡಿಎಸ್‌ನಲ್ಲಿ ಮುಸ್ಲಿಮರನ್ನು ಪ್ರತಿನಿಧಿಸುತ್ತಿರುವ ನಿಷ್ಠಾವಂತ ನಾಯಕರಾಗಿದ್ದಾರೆ. ಅಂತಹವರನ್ನು ಈ ರೀತಿ ಟೀಕಿಸುವುದು ಸರಿಯಲ್ಲ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಿಂದಾಗಿ ಕೆ.ಆರ್‌. ಮಾರುಕಟ್ಟೆ, ಕೆ.ಜಿ. ರಸ್ತೆ ಸೇರಿದಂತೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಯಿತು. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರು.

ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ದೇವೇಗೌಡ
ಪಕ್ಷದ ಶಾಸಕ ಜಮೀರ್ ಅಹ್ಮದ್ ಖಾನ್‌ ಬಗ್ಗೆ ತಾವು ಆಡಿರುವ ಮಾತುಗಳನ್ನು ಕೆಲವರು ತಪ್ಪಾಗಿ ಅರ್ಥೈಸಿ, ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಇಂಥ ಪ್ರತಿಭಟನೆಗಳಿಂದಾಗಿ ಪಕ್ಷದ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಬಾರದು ಎಂದು ದೇವೇಗೌಡ ಮನವಿ ಮಾಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಕೆಲವರು ತಮ್ಮ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT