ADVERTISEMENT

18 ತಿಂಗಳಲ್ಲಿ ಆನೇಕಲ್‌ಗೆ ಕಾವೇರಿ ನೀರು ಪೂರೈಕೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2015, 20:34 IST
Last Updated 19 ಏಪ್ರಿಲ್ 2015, 20:34 IST

ಆನೇಕಲ್‌:  ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಕಾವೇರಿ ನೀರು ಪೂರೈಕೆಗೆ ಕಾರ್ಯಾದೇಶ ನೀಡಲಾಗಿದ್ದು ಇನ್ನೂ 18 ತಿಂಗಳಲ್ಲಿ ಪಟ್ಟಣಕ್ಕೆ ಕಾವೇರಿ ನೀರು ದೊರೆಯಲಿದೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು

ಅವರು ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ ₨5ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ತಾಲ್ಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ತಾಲ್ಲೂಕಿಗೆ ಮಂಜೂರು ಮಾಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚಂದಾಪುರ–ಆನೇಕಲ್ ರಸ್ತೆಯ ಕಾಮಗಾರಿ ಪ್ರಾರಂಭವಾಗಲಿದೆ. ರಸ್ತೆ ಬದಿಯ ಮರಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

ಪುರಸಭಾ ಅಧ್ಯಕ್ಷ ಎನ್.ಎಸ್. ಅಶ್ವತ್ಥ್‌ನಾರಾಯಣ ಮಾತನಾಡಿ ನಗರೋತ್ಥಾನ ಯೋಜನೆಯಡಿ ₨5 ಕೋಟಿ ವೆಚ್ಚದಲ್ಲಿ ಕಂಬದ ಗಣಪತಿ ವೃತ್ತದಿಂದ ಸಂತೆ ಮಾರುಕಟ್ಟೆವರೆಗೆ ಸುಸಜ್ಜಿತ ರಸ್ತೆ ನಿರ್ಮಿಸಲಾಗುವುದು. ಇದಲ್ಲದೇ ಅವಶ್ಯಕತೆಯಿರುವ ವಿವಿಧ ರಸ್ತೆಗಳ ಅಭಿವೃದ್ಧಿ ಸಹ ಕೈಗೊಳ್ಳಲಾಗುವುದು ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು ಇದು ಪೂರ್ಣಗೊಳ್ಳುವವರೆಗೆ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಪಡಿಸಲು ಸಾಧ್ಯವಾಗುವುದಿಲ್ಲ. ಎರಡನೇ ಹಂತದ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ವೇಗವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ಮನವಿ : ಆನೇಕಲ್‌ ಪುರಸಭಾ ವ್ಯಾಪ್ತಿಗೆ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ನಗರೋತ್ಥಾನ ಯೋಜನೆಯಡಿ ₨ 5ಕೋಟಿ  ಅನುದಾನ ಮಂಜೂರು ಮಾಡಿಸಿದ್ದರು. ಈ ಕಾಮಗಾರಿ ಪ್ರಾರಂಭವಾಗುತ್ತಿದೆ. ಶಾಸಕ ಬಿ.ಶಿವಣ್ಣ  ಅವರು ಸಹ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವ ಮೂಲಕ ಸಮಗ್ರ ಅಭಿವೃದ್ಧಿ ಕೊಡುಗೆ ನೀಡಬೇಕು ಎಂದು ಪುರಸಭಾ ಸದಸ್ಯರಾದ ಕೆ.ನಾಗರಾಜು ಮತ್ತು ನರಸಿಂಹರೆಡ್ಡಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.