ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಖಾಸಗೀಕರಣ ಪ್ರಸ್ತಾವ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಫೆಬ್ರುವರಿ 2ರಿಂದ ರಾಜ್ಯದಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದೆ.
‘ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸುವಲ್ಲಿ ಐಸಿಡಿಎಸ್ ಯೋಜನೆ ಮಹತ್ವದ ಪಾತ್ರ ವಹಿಸುತ್ತಿದೆ. ಈ ಯೋಜನೆಯನ್ನು ಇನ್ನಷ್ಟು ಬಲಪಡಿಸಲು ಬೇಕಾದ ಸ್ವಂತ ಕಟ್ಟಡ, ಶೌಚಾಲಯ, ನೌಕರರಿಗೆ ಭದ್ರತೆ ಮುಂತಾದ ಸೌಲಭ್ಯಗಳನ್ನು ಒದಗಿಸುವ ಬದಲು ಖಾಸಗಿಯವರಿಗೆ ನೀಡಲು ಹೊರಟಿರುವುದನ್ನು ವಿರೋಧಿಸಿ ಆಯಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು’ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ತಿಳಿಸಿದ್ದಾರೆ.
ಐಸಿಡಿಎಸ್ ಯೋಜನೆಯನ್ನು ಯಾವುದೇ ರೂಪದಲ್ಲೂ ಖಾಸಗಿಕರಣಗೊಳಿಸಬಾರದು. 39 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ನೌಕರರಿಗೆ ₨15ಸಾವಿರ ಮಾಸಿಕ ವೇತನ ನೀಡಬೇಕು. ₨3ಸಾವಿರ ಮಾಸಿಕ ಪಿಂಚಣಿ ನೀಡಬೇಕು ಎಂಬುದು ಪ್ರಮುಖ ಒತ್ತಾಯವಾಗಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.