ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಖಾತೆ ನೋಂದಣಿ ವ್ಯವಸ್ಥೆಯನ್ನು ಆನ್ಲೈನ್ ವ್ಯಾಪ್ತಿಗೆ ಒಳಪಡಿಸುವ ನಿಟ್ಟಿನಲ್ಲಿ ನಾಲ್ಕು ವಾರಗಳ ಒಳಗೆ ಸಮಗ್ರ ಅಧಿಸೂಚನೆ ಹೊರಡಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
‘ನನಗೆ ಖಾತೆ ನೀಡಲು ಸತಾಯಿಸಲಾಗುತ್ತಿದೆ’ ಎಂದು ಆಕ್ಷೇಪಿಸಿ ನ್ಯಾಯಾಂಗ ಬಡಾವಣೆ ನಿವಾಸಿ ಮೂಕಾಂಬಿಕಾ ಭಟ್ ಎಂಬುವರು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಎಂ.ಆರ್. ನಾಯಕ್, ‘ ಖಾತೆ ನೋಂದಣಿ ಹಾಗೂ ಹಂಚಿಕೆ ವಿಚಾರದಲ್ಲಿ ಸಾಕಷ್ಟು ಗೊಂದಲ ಇರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ’ ಎಂದರು.
‘ಎ ಖಾತಾ, ಬಿ ಖಾತಾ ನೀಡಿಕೆಯಲ್ಲಿನ ಗೊಂದಲ ಪರಿಹರಿಸಲಾಗುವುದು. ಇದಕ್ಕಾಗಿ ಪಾರದರ್ಶಕ ನೀತಿ ರೂಪಿಸಲಾಗುವುದು. ಖಾತೆ ನೀಡಿಕೆ, ವರ್ಗಾವಣೆ, ಹೆಸರು ಬದಲಾವಣೆ ಸೇರಿದಂತೆ ಎಲ್ಲ ಪ್ರಕ್ರಿಯೆಯನ್ನು ಆನ್ಲೈನ್ ವ್ಯಾಪ್ತಿಗೆ ತರಲಾಗುವುದು’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.