ಬೆಂಗಳೂರು: ‘ಕೇಂದ್ರ ಸರ್ಕಾರವು 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿ ಕೇಂದ್ರ ಸರ್ಕಾರದ ಪಿಂಚಣಿದಾರರ ಸಂಘಟನೆಗಳ ಒಕ್ಕೂಟವು ಜೂನ್ 23ರಂದು ಧರಣಿ ಹಮ್ಮಿಕೊಂಡಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಜಂಟಿ ಪ್ರಧಾನ ಕಾರ್ಯದರ್ಶಿ ಟಿ.ವಿ.ಸೂರ್ಯಪ್ರಕಾಶ್, ‘ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಳಿಗ್ಗೆ 11ಕ್ಕೆ ಪ್ರತಿಭಟನೆ ನಡೆಯಲಿದೆ. 1.30ಕ್ಕೆ ಮೆರವಣಿಗೆ ಮೂಲಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ’ ಎಂದು ಹೇಳಿದರು.
‘ಕಾಫಿ ಮಂಡಳಿ, ಸ್ಪೈಸಸ್ ಬೋರ್ಡ್, ರಬ್ಬರ್ ಮಂಡಳಿ, ತಂಬಾಕು ಮಂಡಳಿ, ಟೀ ಮಂಡಳಿ, ಎಂಪಿಇಡಿಎ, ರೇಷ್ಮೆ ಮಂಡಳಿ, ಕೇಂದ್ರೀಯ ವಿದ್ಯಾಲಯ ಸಂಘಟನ್, ಐಐಎಂಬಿ, ಐಐಟಿ–ಖರಗ್ಪುರ, ರಾಷ್ಟ್ರೀಯ ವಿಜ್ಞಾನ ವಸ್ತುಸಂಗ್ರಹಾಲಯ ಮಂಡಳಿ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಗಳಿಗೆ ನೌಕರರಿಗೆ ಭತ್ಯೆ ಸೌಲಭ್ಯ ನೀಡಿಲ್ಲ. 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
‘ವೈಜ್ಞಾನಿಕ ಮತ್ತು ಔದ್ಯಮಿಕ ಸಂಶೋಧನಾ ಮಂಡಳಿ, ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ, ತೆಂಗಿನ ನಾರು ಮಂಡಳಿ ಮತ್ತು ಭಾರತೀಯ ಮಾನಕ ಸಂಸ್ಥೆಗಳ ಪಿಂಚಣಿದಾರರಿಗೆ 7ನೇ ವೇತನ ಆಯೋಗದ ಶಿಫಾರಸು ಗಳನ್ನು 10 ತಿಂಗಳ ಹಿಂದೆಯೇ ಜಾರಿ ಮಾಡಲಾಗಿದೆ ಈ ಮಲತಾಯಿ ಧೋರಣೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.