ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನೊಂದಿಗೆ ಜಗಳ ತೆಗೆದ ಯುವಕರಿಬ್ಬರು, ಚಾಕುವಿನಿಂದ ಇರಿದು ಆತನನ್ನು ಹತ್ಯೆ ಮಾಡಿದ್ದಾರೆ.
‘ಪೆನ್ಷನ್ ಮೊಹಲ್ಲಾದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಆಂಜನಪ್ಪ ಗಾರ್ಡನ್ನ ರಾಕೇಶ್ ಕೊಲೆಯಾದವನು. ರಂಜಿತ್ ಹಾಗೂ ಮಣಿ ಎಂಬುವರು ಈ ಕೃತ್ಯ ಎಸಗಿರುವುದು ಖಚಿತವಾಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್ ತಿಳಿಸಿದರು.
ರಾಕೇಶ್, ಅಂಗಡಿಗಳಿಗೆ ಕುಡಿಯುವ ನೀರಿನ ಬಾಟಲಿಗಳನ್ನು ಸರಬರಾಜು ಮಾಡುತ್ತಿದ್ದ. ಕೆಲಸ ಮುಗಿಸಿಕೊಂಡು ರಾತ್ರಿ 10.30ರ ಸುಮಾರಿಗೆ ಮನೆಗೆ ನಡೆದು ಹೋಗುತ್ತಿದ್ದಾಗ, ರಂಜಿತ್ ಹಾಗೂ ಮಣಿ ಎದುರಾಗಿದ್ದಾರೆ. ಕಂಠಪೂರ್ತಿ ಕುಡಿದಿದ್ದ ಅವರು, ವಿನಾಕಾರಣ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ಕೆರಳಿ ರಾಕೇಶ್ ಕೂಡ ವಾಗ್ವಾದ ನಡೆಸಿದ್ದಾನೆ.
ಈ ಹಂತದಲ್ಲಿ ಆರೋಪಿಗಳು ಹೊಟ್ಟೆ ಹಾಗೂ ಎದೆಗೆ ಚಾಕುವಿನಿಂದ ಇರಿದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ರಾಕೇಶ್ ಕೊನೆಯುಸಿರೆಳೆದಿದ್ದಾನೆ. ರಂಜಿತ್ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಯಾಗಿದ್ದು, ಆತನ ವಿರುದ್ಧ ವಿವಿಧ ಠಾಣೆಗಳಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಕಾಟನ್ಪೇಟೆ ಪೊಲೀಸರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.