ಭಾಲ್ಕಿ: ‘ಪ್ರತಿಯೊಂದು ಬಡ ಕುಟುಂಬಕ್ಕೆ ವಾಸ ಮಾಡಲು ಯೋಗ್ಯವಾದ ಸೂರು ಇರಬೇಕು ಎಂಬ ಸದುದ್ದೇಶದಿಂದ ತಾಲೂಕನ್ನು ಗುಡಿಸಲು ಮುಕ್ತವಾಗಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನುಡಿದರು.
ಪಟ್ಟಣದಲ್ಲಿ ಭಾನುವಾರ ತಾಲ್ಲೂಕಿನ ವಿವಿಧ ಗ್ರಾಮಗಳ ಫಲಾನುಭವಿಗಳಿಗೆ ಬಸವ ವಸತಿ ಯೋಜನೆ ಅಡಿ ಮಂಜೂರಾದ ಮನೆಗಳ ಹಕ್ಕು ಪತ್ರಗಳನ್ನು ವಿತರಿಸಿ ಮಾತನಾಡಿದರು.
ಬಸವ ವಸತಿ ಯೋಜನೆಯಡಿ 2017- 18ನೇ ಸಾಲಿನಲ್ಲಿ 1044 ಮನೆ ಮಂಜೂರು ಮಾಡಿಸಿ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರ ನೀಡಲಾಗಿದೆ. ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಂಚಲಾಗಿದೆ ಎಂದರು.
ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚುವರಿ ಮನೆಗಳು ಮಂಜೂರು ಮಾಡಿಸಿ ಬಡವರಿಗೆ ನೀಡಲಾಗುವುದು. ನಾನಾ ವಸತಿ ಯೋಜನೆಗಳಲ್ಲಿ ಆಯ್ಕೆಯಾದ 20 ಸಾವಿರ ಜನ ಫಲಾನುಭವಿಗಳು ಈಗಾಗಲೇ ಮನೆ ನಿರ್ಮಾಣ ಮಾಡಿಕೊಂಡಿದ್ದು, ಉಳಿದ ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ವಿವರಿಸಿದರು.
ಮನೆ ಹಂಚಿಕೆಯಲ್ಲಿ ಯಾವುದೇ ಅವ್ಯವಹಾರ ನಡೆಯಬಾರದು ಎನ್ನುವ ಕಾರಣಕ್ಕೆ ನೇರವಾಗಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲಾಗುತ್ತಿದೆ. ಒಂದು ವೇಳೆ ಯಾರಾದರು ಹಣ ಕೇಳಿದರೆ ಗಮನಕ್ಕೆ ತನ್ನಿ ಎಂದು ಸಾರ್ವಜನಿಕರಿಗೆ ತಿಳಿಸಿದರು. ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.