ಬಸವಕಲ್ಯಾಣ: ‘ಹಳ್ಳಿಗಳ ಉದ್ಧಾರವಾದರೆ ಮಾತ್ರ ದೇಶದ ಉದ್ಧಾರ ಆದ್ದರಿಂದ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಬೇಕು’ ಎಂದು ಮಾಜಿ ಸಚಿವ ಬಸವರಾಜ ಪಾಟೀಲ ಅಟ್ಟೂರ್ ಹೇಳಿದರು.
ಇಲ್ಲಿನ ಬಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಉಡಾನ್ ಟೆಕ್ನೊ ಸಾಂಸ್ಕೃತಿಕ ಹಬ್ಬದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ತಾವು ಗ್ರಾಮೀಣ ಭಾಗದಲ್ಲಿ ಎಂಜಿನಿಯರಿಂಗ್ ಕಾಲೇಜು ಆರಂಭಿಸಿದ್ದರ ಹಿಂದೆ ಇಲ್ಲಿನ ಜನರಿಗೆ ಶೈಕ್ಷಣಿಕ ಸೌಲಭ್ಯ ದೊರಕಬೇಕು ಎನ್ನುವುದೇ ಆಗಿದೆ. ಈ ಸಂಸ್ಥೆಯಿಂದ ಶಿಕ್ಷಣ ಪಡೆದ ಅನೇಕರು ಉನ್ನತ ಹುದ್ದೆಗೇರಿದ್ದಾರೆ. ಸಂಸ್ಥೆಯ ಬೆಳವಣಿಗೆಗೆ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಬಿ.ಎಸ್.ಪಾಟೀಲ ಮಾತನಾಡಿ, ‘ಮನಸ್ಸು ಮತ್ತು ದೃಢವಿಶ್ವಾಸ ಇದ್ದರೆ ಮಾತ್ರ ಯಾವುದೇ ಕೆಲಸದಲ್ಲಿ ಯಶಸ್ಸು ದೊರಕಲು ಸಾಧ್ಯ. ಕಠಿಣ ಪರಿಶ್ರಮಪಟ್ಟು ಓದಿದರೆ ಮಾತ್ರ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾಗಬಹುದು’ ಎಂದು ಹೇಳಿದರು.
ಪ್ರಾಚಾರ್ಯ ಎಸ್.ಬಿ.ಕಿವಡೆ ಮಾತನಾಡಿದರು. ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ದಿಲೀಪಕುಮಾರ ತಾಳಂಪಳ್ಳಿ, ದೇವರಾಜ ತಾಳಂಪಳ್ಳಿ, ವೀರಶೆಟ್ಟಿ ಖೇಣಿ, ವಿಮಲಾಬಾಯಿ ಪಾಲ್ಗೊಂಡಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಭಾಲ್ಕಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಸುಹಾಸಿನಿ ಸ್ವಾಮಿ, ಕಾವೇರಿ, ಬಸವಕಲ್ಯಾಣ ಎಂಜಿನಿಯರಿಂಗ್ ಕಾಲೇಜಿನ ಪೂಜಾ, ಮಲ್ಲಿಕಾರ್ಜುನ ಪಾಟೀಲ, ಸೋಹೇಬ್, ಸಂಗಮೇಶ ಅವರಿಗೆ ಬಹುಮಾನ ವಿತರಿಸಲಾಯಿತು. ಸುವರ್ಣಲತಾ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.