ಬೀದರ್: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಾತ್ಯತೀತ ಜನತಾ ದಳ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ ನುಡಿದರು.
ನಗರದಲ್ಲಿ ಸೋಮವಾರ ನಡೆದ ಪಕ್ಷದ ಎಸ್ಸಿ, ಎಸ್ಟಿ ವಿಭಾಗದ ಸಭೆಯಲ್ಲಿ ಅವರು ಮಾತನಾಡಿ, ‘ಜಾತ್ಯತೀತ ಜನತಾ ದಳವು ಕಾಂಗ್ರೆಸ್, ಬಿಜೆಪಿಗಿಂತ ಅಧಿಕ ಸ್ಥಾನಗಳನ್ನು ಪಡೆಯಲಿದೆ. ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಡಾ.ಕೆ.ಅನ್ನದಾನಿ ಮಾತನಾಡಿ, ‘ಜೆಡಿಎಸ್ ಹೊರತುಪಡಿಸಿ ಇತರ ಪಕ್ಷಗಳು ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಮತ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿವೆ. ಮತದಾರರು ಅಂಥ ಪಕ್ಷಗಳ ಬಣ್ಣದ ಮಾತಿಗೆ ಮರಳಾಗಬಾರದು. ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ಜನಪರ ಕಾರ್ಯಗಳ ಬಗೆಗೆ ಮನೆ ಮನೆಗೆ ತೆರಳಿ ಅರಿವು ಮೂಡಿಸಬೇಕು’ ಎಂದು ಸಲಹೆ ಮಾಡಿದರು.
‘ಸೆಪ್ಟೆಂಬರ್ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ. ಅದರ ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತಿದೆ. ಜಿಲ್ಲೆಯ ಕಾರ್ಯಕರ್ತರು ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ತಿಳಿಸಿದರು.
ಮಾಜಿ ಸಚಿವೆ ಶಿವಕಾಂತಾ ಚತುರೆ ಮಾತನಾಡಿ, ‘ಜೆಡಿಎಸ್ ರೂಪಿಸಿದ ಕೆಲ ಯೋಜನೆಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಹೆಸರು ಬದಲಿಸಿ ಜಾರಿಗೊಳಿಸಿದೆ’ ಎಂದು ಟೀಕಿಸಿದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಮಾತನಾಡಿದರು.
ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಮುಜಿಬುದ್ದೀನ್ ಪಟೇಲ್, ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಪ್ರಭು ಕೋಗಿಲ್, ಜಿಲ್ಲಾ ಘಟಕದ ಅಧ್ಯಕ್ಷ ದೇವೆಂದ್ರ ಸೋನಿ, ಮುನಿ ವೆಂಕಟಪ್ಪ, ಮುನಿರಾಜು, ಎನ್.ಜಿ. ಅನಿಲಕುಮಾರ, ಕೆ. ಈರಣ್ಣ, ಕೇಶಪ್ಪ ಬಿರಾದಾರ, ಶಬ್ಬೀರ್ ಪಾಶಾ, ಅನ್ನಪೂರ್ಣಬಾಯಿ, ಮಾರುತಿ ಬೌದ್ಧೆ, ಸಿದ್ರಾಮಪ್ಪ ವಂಕೆ, ಅಶೋಕ ಕೋಡಗೆ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.