ಹುಮನಾಬಾದ್: ಜೆಡಿಎಸ್ ಅಭ್ಯರ್ಥಿ ನಸಿಮೋದ್ದಿನ್ ಎನ್.ಪಟೇಲ ಅವರು ಗುರುವಾರ ನೂರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಇಲ್ಲಿನ ವೀರಭದ್ರೇಶ್ವರ ದೇವಾಲಯದಿಂದ ಮಿನಿವಿಧಾನ ಸೌಧಕ್ಕೆ ತೆರಳಿದರು. ಈ ಸಂದರ್ಭ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಬಂಡೆಪ್ಪ ಕಾಶೆಂಪುರ, ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವರಾಜ ಹುಲಿ, ಬಿಎಸ್ಪಿ ರಾಷ್ಟ್ರೀಯ ಕಾರ್ಯದರ್ಶಿ ಮಾರಸಂದ್ರ ಮುನಿಯಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಜೆಡಿಎಸ್ ರಮೇಶ ಪಾಟೀಲ, ಮುಖಂಡ ಸುರೇಶ ಎಂ.ಸೀಗಿ, ಶಿವಪುತ್ರ ಮಾಳಗೆ, ತಾಲ್ಲೂಕು ಘಟಕ ಅಧ್ಯಕ್ಷ ಮಹೇಶ ಎಂ.ಅಗಡಿ ಇದ್ದರು.
ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಮಾತನಾಡಿ, ‘ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ. ರೈತರು, ಮಧ್ಯಮ ವರ್ಗದವರ ಅಭಿವೃದ್ಧಿ ಜೆಡಿಎಸ್ ಪಕ್ಷದಿಂದ ಮಾತ್ರ ಸಾಧ್ಯ. ಆ ಎರಡು ಪಕ್ಷಗಳನ್ನು ಅಧಿಕಾರದಿಂದ ದೂರ ಇಡುವ ಏಕೈಕ ಉದ್ದೇಶದಿಂದ ಈ ಬಾರಿ ಬಿಎಸ್ಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದೇವೆ’ ಎಂದರು.
‘ಪ್ರಕಾಶ ಖಂಡ್ರೆ ಅವರು ಈಗಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ. ಭಾಲ್ಕಿ ಕ್ಷೇತ್ರದಿಂದ ಖಂಡ್ರೆ ಅಭ್ಯರ್ಥಿ ಆಗುವುದು ಬಹುತೇಕ ಖಚಿತ. ಎಂ.ಜಿ.ಮುಳೆ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ. ಜೆಡಿಎಸ್– ಬಿಎಸ್ಪಿ ಹೊಂದಾಣಿಕೆ ಮುಖಾಂತರ ಎಲ್ಲ ವರ್ಗಗಳಿಗೆ ಸ್ಪರ್ಧೆ ಅವಕಾಶ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿಕೊಟ್ಟಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಜೆಡಿಎಸ್ ಅಭ್ಯರ್ಥಿ ವಿವರ
ನಸಿಮೋದ್ದಿನ್ ಅವರು ಬೀದರ್ ತಾಲ್ಲೂಕು ಹೊಚುಕನಳ್ಳಿ ಗ್ರಾಮದ ಸಾಬೀರಾ ಬೇಗಂ ಮತ್ತು ನಿಜಾಮುದ್ದಿನ್ ಪಟೇಲ ಅವರ ದ್ವಿತೀಯ ಪುತ್ರ. 1964ರಲ್ಲಿ ಜನಿಸಿದ್ದಾರೆ. ಒಮ್ಮೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. 2008ರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬೀದರ್ ದಕ್ಷಿಣ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ 2013ರಲ್ಲಿ ರಾಜಶೇಖರ ಬಿ.ಪಾಟೀಲ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.