ADVERTISEMENT

ಪ್ರತ್ಯೇಕ ಧರ್ಮಕ್ಕೆ 38 ವರ್ಷಗಳ ಹಿಂದೆಯೇ ಕೇಂದ್ರಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2017, 7:08 IST
Last Updated 18 ಸೆಪ್ಟೆಂಬರ್ 2017, 7:08 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಬೀದರ್: ‘ವೀರಶೈವ–ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆಗೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಮಹಾಸಾಭಾ 38 ವರ್ಷಗಳ ಹಿಂದೆಯೇ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಪ್ರತ್ಯೇಕ ಧರ್ಮ ಆಗಬೇಕು ಎನ್ನುವುದು ಬಹುದಶಕಗಳ ಬೇಡಿಕೆಯಾಗಿದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಾಭಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಈಶ್ವರ ಖಂಡ್ರೆ ಹೇಳಿದರು.

‘ವಿವಾದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಅಲ್ಲ. ಕೆಲವರು ಅಪಾರ್ಥದ ಹೇಳಿಕೆ ನೀಡುತ್ತಿರುವುದು ಖಂಡನೀಯ. ಸಚಿವ ಎಂ.ಬಿ.ಪಾಟೀಲ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ’ ಎಂದು ಭಾನುವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.

‘1979ರಲ್ಲಿ ಅಖಿಲ ಭಾರತ ವೀರಶೈವ ಮಹಾಸಾಭಾ ಜಾತಿ ಗಣತಿಯ ಧರ್ಮ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಯಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿತ್ತು. 2000ರಲ್ಲಿ ಭೀಮಣ್ಣ ಖಂಡ್ರೆ ಅಧ್ಯಕ್ಷರಾಗಿದ್ದಾಗಲೂ ಮನವಿ ಸಲ್ಲಿಸಲಾಗಿತ್ತು.

ADVERTISEMENT

2010–2011ರಲ್ಲಿ ಕೇಂದ್ರದಲ್ಲಿ ಸಚಿವರಾಗಿದ್ದ ಸುಶೀಲಕುಮಾರ ಶಿಂಧೆ ಅವರಿಗೆ ಒಟ್ಟು 56 ಸಂಸದರು ಹಾಗೂ ಶಾಸಕರು ಮನವಿ ಸಲ್ಲಿಸಿದ್ದರು. ಬಿ.ಎಸ್‌.ಯಡಿಯೂರಪ್ಪ, ಜಗದೀಶ ಶೆಟ್ಟರ್‌, ಬಸವರಾಜ ಹೊರಟ್ಟಿ, ರಾಜಶೇಖರ ಪಾಟೀಲ ಅವರೂ ಸಹಿ ಹಾಕಿದ್ದರು. ಕೇಂದ್ರ ಸರ್ಕಾರ ಮನವಿಯನ್ನು ತಿರಸ್ಕರಿಸಿಲ್ಲ’ ಎಂದರು.

‘ವೀರಶೈವ, ಲಿಂಗಾಯತ ಎರಡೂ ಒಂದೇ. ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗೊ.ರು. ಚನ್ನಬಸಪ್ಪ ಅವರನ್ನು ಒಂದೆಡೆ ಸೇರಿಸಿ ಚರ್ಚೆ ನಡೆಸಿ ಒಮ್ಮತದ ನಿರ್ಣಯಕ್ಕೆ ಬರಲಾಗುವುದು’ ಎಂದು ಹೇಳಿದರು.

‘ಸಿದ್ಧಗಂಗಾ ಮಠದಿಂದ ಎರಡು ಪತ್ರಗಳು ಬಿಡುಗಡೆಯಾಗಿರುವ ವಿಷಯದ ಬಗೆಗೆ ಮಠದವರೇ ಸ್ಪಷ್ಟನೆ ನೀಡಿದ್ದಾರೆ. ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ವಿವಾದದಲ್ಲಿ ತರುವುದು ಸರಿ ಅಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.