ಔರಾದ್: ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಲಾದ 371(ಜೆ) ಮೀಸಲು ಸೌಲಭ್ಯ ಬಳಸಿಕೊಳ್ಳುವಂತೆ ಉಪ ವಿಭಾಗಾಧಿಕಾರಿ ಅನೀಸ್ ಕೆ. ಜಾಯ್ ಸಲಹೆ ನೀಡಿದರು.
ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಬುಧವಾರ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ 371(ಜೆ) ತಿಳಿವಳಿಕೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಔರಾದ್ ತಾಲ್ಲೂಕಿನ ವಿದ್ಯಾರ್ಥಿಗಳು, ಯುವಕರು 371 (ಜೆ) ಅಡಿ ಪ್ರಮಾಣ ಪತ್ರ ಪಡೆಯಲು ಅಷ್ಟೊಂದು ಆಸಕ್ತಿ ತೋರುತ್ತಿಲ್ಲ. ಈಚೆಗೆ ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಜೂನ್ ವೇಳೆಗೆ ಈ ನೇಮಕಾತಿ ಪ್ರಕ್ರಿಯೆ ಮುಗಿಯಲಿರುವುದರಿಂದ ನಿರುದ್ಯೋಗಿ ಪದವೀಧರರು ಇದರ ಲಾಭ ಪಡೆದುಕೊಳ್ಳಬೇಕು ಎಂದರು.
ಮೀಸಲು ಸೌಲಭ್ಯ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಮಾಣಪತ್ರ ನೀಡುವಾಗ ಕಟ್ಟುನಿಟ್ಟಿನ ಪರಿಶೀಲನೆ ನಡೆಸಲಾಗುತ್ತಿದೆ. ಇದಕ್ಕಾಗಿ ಕೆಲ ನಿಯಮಾವಳಿ ರೂಪಿಸಿರುವುದರಿಂದ ಅವುಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದು ಹೇಳಿದರು.
ಸಿಇಟಿ ಬರೆಯುವ ವಿದ್ಯಾರ್ಥಿಗಳು ಕಾಲೇಜು ಪ್ರಾಚಾರ್ಯರ ಮೂಲಕ ಅರ್ಜಿ ಸಲ್ಲಿಸಿದರೂ ಅವರಿಗೆ ಅರ್ಹತಾ ಪ್ರಮಾಣಪತ್ರ ನೀಡಲಾಗುವುದು. ಪ್ರಮಾಣಪತ್ರ ಯಾವ ಉದ್ದೇಶಕ್ಕೆ ಎಂಬುದನ್ನು ನಮೂದಿಸುವುದು ಕಡ್ಡಾಯ ಎಂದು ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದರು.
ಅರ್ಹತಾ ಪತ್ರ ಹೊಂದುವ ಅಭ್ಯರ್ಥಿ ಈ ಭಾಗದಲ್ಲಿ ಓದಿರುವ ಶಾಲೆಗಳಿಂದ ವ್ಯಾಸಂಗ ಪ್ರಮಾಣಪತ್ರ ದೃಢೀಕರಣದೊಂದಿಗೆ ತಹಶೀಲ್ದಾರ್ ಕಚೇರಿಗೆ ಸಲ್ಲಿಸಬೇಕು. ಇದರ ಜೊತೆಗೆ ಮನೆ– ಹೊಲ ಇದ್ದವರು ಖಾತಾ ನಮೂನೆ, ಪಹಣಿ ಪತ್ರ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಸೇರಿದಂತೆ ತಾವು 10 ವರ್ಷದಿಂದ ಈ ಭಾಗದಲ್ಲೇ ವಾಸವಿರುವ ಗುರುತಿನಪತ್ರ ಒದಗಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ಜಗನ್ನಾಥರೆಡ್ಡಿ ಮಾತನಾಡಿ, ಅರ್ಹತಾ ಪ್ರಮಾಣಪತ್ರ ಪಡೆಯಲು ತಮ್ಮ ಕಚೇರಿಯಲ್ಲಿ ವಿಳಂಬ ಆಗದಂತೆ ನೋಡಿಕೊಳ್ಳಲಾಗುವುದು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಡಿ. ಕಾಂಬಳೆ, ಪ್ರಾಚಾರ್ಯ ವಿ.ಎಂ. ಸ್ವಾಮಿ, ಮನೋಹರ ಬಕಾಲೆ, ಹಾವಗಿರಾವ ವಟಗೆ, ಬಸವರಾಜ ಫುಲಾರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.