ADVERTISEMENT

ಅಂಗವಿಕಲತೆ ಶಾಪವಲ್ಲ: ಸಚಿವ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2016, 6:51 IST
Last Updated 31 ಡಿಸೆಂಬರ್ 2016, 6:51 IST

ಚಾಮರಾಜನಗರ: ‘ಅಂಗವಿಕಲತೆ ಶಾಪವಲ್ಲ. ಅದನ್ನು ಮೆಟ್ಟಿ ನಿಲ್ಲುವ ಮೂಲಕ ಸಮಾಜದಲ್ಲಿ ಎಲ್ಲರಂತೆ ಬದುಕು ರೂಪಿಸಿಕೊಳ್ಳಬೇಕು’ ಎಂದು ಸಹಕಾರ ಮತ್ತು ಸಕ್ಕರೆ ಸಚಿವ ಎಚ್.ಎಸ್. ಮಹದೇವಪ್ರಸಾದ್ ಹೇಳಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಹಾಗೂ ತಾಲ್ಲೂಕು ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿಯಿಂದ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 20,400 ಅಂಗವಿಕಲರು ಇದ್ದಾರೆ. ಈ ಪೈಕಿ 18,500 ಜನರಿಗೆ ಗುರುತಿನ ಚೀಟಿ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ 1,500 ಮಂದಿ ಅಂಗವಿ ಕಲರನ್ನು ಗುರುತಿಸಿ ಅವರಿಗೆ ಸಲಕರಣೆ ನೀಡಲಾಗಿದೆ. ಇನ್ನೂ 980 ಸಲಕರಣೆ ವಿತರಣೆ ಮಾಡಬೇಕಿದೆ ಎಂದು ತಿಳಿಸಿದರು.

ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಅಂಗವಿಕಲರಿಗೆ ಇರುವ ಶೇ 3ರಷ್ಟು ಮೀಸಲಾತಿ ಸರಿಯಾಗಿ ಸದ್ಬಳಕೆ ಯಾಗುತ್ತಿಲ್ಲ ಎಂದು ತಿಳಿಸಿದರು.
ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತ ನಾಡಿ, ಸರ್ಕಾರ ನೀಡಿರುವ ಮೀಸಲಾತಿ ಯಿಂದ ಯಾವುದೇ ಅಂಗವಿಕಲರು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗ ಅಂಗವಿಕಲರ ಜಾಥಾಕ್ಕೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ.ಚಂದ್ರು ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಬಿ.ರಾಮು, ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಭಾರತಿ, ನಗರಸಭೆ ಅಧ್ಯಕ್ಷೆ ಎಸ್. ಎನ್. ರೇಣುಕಾ, ಉಪಾಧ್ಯಕ್ಷ ಆರ್.ಎಂ. ರಾಜಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಸರ್ವೇ ಶ್ವರ್, ಅಂಗವಿಕಲರ ಕಲ್ಯಾಣಾಧಿಕಾರಿ ಪೃಥ್ವಿದಾಸ್, ಅಂಗವಿಕಲರ ಸಂಘದ ರಾಜ್ಯ ಅಧ್ಯಕ್ಷ ಬಸವಣ್ಣ, ಜಿಲ್ಲಾ ಅಧ್ಯಕ್ಷ ಮಹದೇವಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.