ADVERTISEMENT

‘ಅಂಬೇಡ್ಕರ್‌ ಮಹಾನ್‌ ಮಾನವತಾವಾದಿ’

ಅಂಬೇಡ್ಕರ್ ಅವರ ಜನ್ಮ ಶತಮಾನೋತ್ಸವ; ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2017, 10:12 IST
Last Updated 16 ಫೆಬ್ರುವರಿ 2017, 10:12 IST
ಚಾಮರಾಜನಗರ: ‘ಶತಮಾನಗಳಿಂದಲೂ ಶೋಷಣೆಗೆ ಒಳಗಾದವರಿಗೆ ಸಾಮಾಜಿಕ ನ್ಯಾಯ, ಸ್ಥಾನಮಾನ ದೊರಕಿಸಲು ಹೋರಾಟ ಮಾಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶ್ವದ ಮಹಾನ್ ಮಾನವತಾವಾದಿ’ ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನೂರೊಂದು ಶೆಟ್ಟಿ ಹೇಳಿದರು. 
 
ನಗರದ ಸೋಮವಾರಪೇಟೆಯ ಅಂಬೇಡ್ಕರ್ ಬಡಾವಣೆಯಲ್ಲಿರುವ ಶಿವಯ್ಯ ಅವರ ಮನೆಯಲ್ಲಿ ಮಂಗಳವಾರ ಅಂಬೇಡ್ಕರ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಬಿಜೆಪಿ ನಗರ ಎಸ್‌ಸಿ ಮೋರ್ಚಾದಿಂದ ನಡೆದ ಸಹಪಂಕ್ತಿ ಭೋಜನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
 
ಅಂಬೇಡ್ಕರ್‌ ಅವರು ಹಾಕಿಕೊಟ್ಟ ಸಾಮಾಜಿಕ ನ್ಯಾಯದಡಿ ಪ್ರತಿಯೊಬ್ಬರು ನೆಮ್ಮದಿಯಿಂದ ಜೀವನ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು. ಅಂಬೇಡ್ಕರ್‌ ದೇಶದ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಪೂರಕವಾದ ಸಂವಿಧಾನ ರಚನೆ ಮಾಡಿದ್ದಾರೆ. ಶಿಕ್ಷಣ ಪ್ರತಿಯೊಬ್ಬರ ಹಕ್ಕು ಎಂದು ಘೋಷಿಸಿದ್ದಾರೆ ಎಂದರು.
 
ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಶಿಕ್ಷಣ, ಹೋರಾಟ, ಸಂಘಟನೆಯ ತತ್ವವನ್ನು ಸಾರಿದ ಅಂಬೇಡ್ಕರ್‌ ಅವರ ಜಯಂತಿಯನ್ನು ಬಿಜೆಪಿ ವರ್ಷಪೂರ್ತಿ ಆಚರಣೆ ಮಾಡುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು.
 
ನಗರದ ಎಸ್‌ಸಿ ಮೋರ್ಚಾ ಅಧ್ಯಕ್ಷ ಶಿವಣ್ಣ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ 125ನೇ ಜಯಂತಿಯನ್ನು ವರ್ಷಪೂರ್ತಿ ಪ್ರತಿ ತಿಂಗಳು 14ರಂದು ವಿಶೇಷ ಕಾರ್ಯಕ್ರಮ ಆಯೋಜಿಸಿ ಆಚರಣೆ ಮಾಡುವಂತೆ ಪಕ್ಷದ ಎಲ್ಲ ಘಟಕಗಳಿಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷದಿಂದ ನಿರಂತರವಾಗಿ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿದೆ ಎಂದರು.
 
ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೇಷಣ್ಣ, ಜಿಲ್ಲಾ ಉಪಾಧ್ಯಕ್ಷ ಮಹದೇವನಾಯಕ, ನಗರ ಘಟಕದ ಪ್ರಭಾರಿ ಶಿವಕುಮಾರ್, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮುಖಂಡ ಪಿ. ರಂಗಸ್ವಾಮಿ ಹಾಜರಿದ್ದರು.
 
* ದಮನಿತ ಸಮುದಾಯಗಳ ನೋವು ಅರಿತಿದ್ದ ಅಂಬೇಡ್ಕರ್‌ ಅವರು ದೇಶಕ್ಕೆ ಸುಭದ್ರವಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ
ನೂರೊಂದು ಶೆಟ್ಟಿ, ಕಾರ್ಯದರ್ಶಿ, ಬಿಜೆಪಿ ಜಿಲ್ಲಾ ಘಟಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.