ಮಲೆ ಮಹದೇಶ್ವರ ಬೆಟ್ಟ: ಸಮೀಪದ ಆಲದ ಮರದ ದೊಡ್ಡಿಯಲ್ಲಿರುವ ಅಂಗನವಾಡಿ ಕೇಂದ್ರವು ಶಿಥಿಲಗೊಂಡಿದ್ದು, ಅದರಲ್ಲೇ ಮಕ್ಕಳು ಆಟ, ಪಾಠ ಕಲಿಯುತ್ತಿದ್ದಾರೆ.
ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿ ರುವ ಈ ಅಂಗನವಾಡಿ ಕೇಂದ್ರ ಭಾರಿ ಮಳೆ ಅಥವಾ ಗಾಳಿ ಬಂದರೆ ಮುರಿದು ಬೀಳುವ ಸ್ಥಿತಿಯಲ್ಲಿದೆ.
ಪರಿಸ್ಥಿತಿ ಹೀಗಿದ್ದರೂ ಇಲ್ಲಿಗೆ 16 ಮಕ್ಕಳು ಬರುತ್ತಿದ್ದಾರೆ. ಅಂಗನವಾಡಿ ಕಟ್ಟಡ ಕುಸಿಯುವ ಭೀತಿಯಿಂದಾಗಿ ಗ್ರಾಮದ ಅನೇಕರು ಮಕ್ಕಳನ್ನು ಅಲ್ಲಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಆರು ವರ್ಷಗಳಿಂದಲೂ ಇದೇ ಸ್ಥಿತಿ ಇದ್ದು, ಸಮಾಜ ಕಲ್ಯಾಣ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಾರ್ಟಳ್ಳಿ ಗ್ರಾಮಪಂಚಾಯಿತಿಗೆ ಅನೇಕ ಭಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಲ್ಲದೇ, ಆರು ವರ್ಷಗಳಿಂದಲೂ ಅಂಗನವಾಡಿ ಕಾರ್ಯಕರ್ತೆಯಾದ ಸಹಾಯಮೇರಿ ಅವರೇ ಬಾಡಿಗೆ ಪಾವತಿಸುತ್ತಿದ್ದಾರೆ ಎಂದೂ ಗ್ರಾಮಸ್ಥರು ತಿಳಿಸಿದ್ದಾರೆ.
‘ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಗ್ರಾಮ ಪಂಚಾಯಿತಿಯಿಂದ ಹಣ ಬಿಡುಗಡೆಗೆ ಅನುಮೋದನೆ ದೊರೆತಿದ್ದು, ಸೂಕ್ತ ಸ್ಥಳವನ್ನೂ ಗುರುತಿಸಲಾಗಿದೆ. ಮೂರು ತಿಂಗಳೊಳಗೆ ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲಾಗುವುದು’ ಎಂದು ಮಾರ್ಟಳ್ಳಿ ಗ್ರಾಮಪಂಚಾಯಿತಿ ಸದಸ್ಯೆ ಪ್ರಿಯಾಂಕ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.