ADVERTISEMENT

ಗಿರಿಜನರಲ್ಲಿ ಮೊಳಗಿದ ಜಾಗೃತಿ ಕೂಗು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2014, 6:51 IST
Last Updated 16 ಏಪ್ರಿಲ್ 2014, 6:51 IST

ಚಾಮರಾಜನಗರ: ‘ಜನತಂತ್ರ ವ್ಯವಸ್ಥೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯ, ಮುಕ್ತ, ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಯ ಘನತೆ ಎತ್ತಿ ಹಿಡಿಯುತ್ತೇವೆ. ಪ್ರತಿ ಚುನಾವಣೆ ಯಲ್ಲಿ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆ, ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ...’

–ಇದು ಕೊಳ್ಳೇಗಾಲ ತಾಲ್ಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನಲ್ಲಿರುವ ಹಿರಿಯಂಬಲ ಗ್ರಾಮದಲ್ಲಿ ಪ್ರತಿಧ್ವನಿಸಿದ ಜಾಗೃತಿಯ ಕೂಗು.

‘ಯಾವುದೇ, ರಾಜಕೀಯ ಪಕ್ಷದವರು ನಿಮ್ಮನ್ನು ಮತಕ್ಕಾಗಿ ಹಣ, ಹೆಂಡ ಹಾಗೂ ಇತರೆ ರೀತಿಯಲ್ಲಿ ಓಲೈಸಲು ಪ್ರಯತ್ನಿಸಿದರೆ ಅಂತಹವರ ವಿರುದ್ಧ ಜಿಲ್ಲಾ ಚುನಾವಣಾಧಿಕಾರಿ ಅಥವಾ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ದೂರು ನೀಡಬೇಕು’ ಎಂದು ಜಿಲ್ಲಾ ಮತದಾರರ ಜಾಗೃತಿ ಅಭಿಯಾನ ಸಮಿತಿ ಅಧ್ಯಕ್ಷ ಡಾ.ಕೆ.ಎಚ್. ನರಸಿಂಹಮೂರ್ತಿ ಹಿರಿ ಯಂಬಲ ಗ್ರಾಮಸ್ಥರೊಂದಿಗೆ ನಡೆದ ಸಂವಾದದಲ್ಲಿ ಸಲಹೆ ನೀಡಿದರು.

ಗ್ರಾಮದ ಮುಖಂಡರೊಬ್ಬರು, ‘ನನಗೆ ಸಂವಿಧಾನಾತ್ಮಕವಾಗಿ ಬಂದಿರುವ ಹಕ್ಕನ್ನು ಮತದಾನ ಮಾಡುವ ಮೂಲಕ ಚಲಾಯಿಸಬೇಕು. ಆದರೆ, ನನ್ನ ಮತದಾರರ ಗುರುತಿನ ಚೀಟಿ ಕಳೆದಿದೆ. ಇದಕ್ಕೆ ಮಾರ್ಗದರ್ಶನ ನೀಡಬೇಕು’ ಎಂದು ಕೋರಿದರು.
ಸಮಾಜದಲ್ಲಿ ನಿಮ್ಮನ್ನು ಗುರುತಿಸಲು ಮತ್ತು ಇತರೇ ಸೌಲಭ್ಯ ಪಡೆಯಲು ಗುರುತಿನ ಚೀಟಿಯನ್ನು ಸಂರಕ್ಷಿಸಿಟ್ಟುಕೊಳ್ಳಬೇಕು.

ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಭರ್ತಿ ಮಾಡಿ ₨ 25 ಪಾವತಿಸಿದರೆ ಮತದಾರರ ಗುರುತಿನ ಚೀಟಿ ಸಿಗುತ್ತದೆ. ಮತದಾರರ ಪಟ್ಟಿಗೆ ಹೆಸರು ನೋಂದಣಿ, ತಿದ್ದುಪಡಿ ಹಾಗೂ ಪಟ್ಟಿಯಲ್ಲಿ ಹೆಸರು ಕೈಬಿಟ್ಟು ಹೋಗಿದ್ದರೆ ಸೇರ್ಪಡೆ ಮಾಡುವ ಪ್ರಕ್ರಿಯೆಗೆ ಮಾರ್ಚ್‌ 16ರವರೆಗೆ ಕೇಂದ್ರ ಚುನಾವಣಾ ಆಯೋಗವು ಅವಕಾಶ ಕಲ್ಪಿಸಿದೆ ಎಂದು ನರಸಿಂಹಮೂರ್ತಿ ತಿಳಿಸಿದರು.

ವಿದ್ಯುನ್ಮಾನ ಮತಯಂತ್ರಗಳನ್ನು ಲೋಕಸಭಾ ಚುನಾವಣೆ ಪಕ್ರಿಯೆಯಲ್ಲಿ ಬಳಸಲಾಗುತ್ತಿದೆ. ಜಿಲ್ಲಾ ಮತದಾರರ ಜಾಗೃತಿ ಅಭಿಯಾನ ಸಮಿತಿಯಿಂದ ಮತಯಂತ್ರದ ಬಳಕೆ ಹಾಗೂ ಚುನಾವಣೆ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಪಂಚಾಯಿತಿ, ವಾರ್ತಾ ಇಲಾಖೆಯ ವಾಹನಗಳನ್ನು ಬಳಸಲಾಗುವುದು. ವಾಹನಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಕಡಿಮೆ ಮತದಾನವಾದ ಮತಗಟ್ಟೆಗಳ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಸಂಚರಿಸಿ ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಿವೆ ಎಂದು ಹೇಳಿದರು.

ಹಿರಿಯಂಬಲ ಸೇರಿದಂತೆ ಉದ್ದಟ್ಟಿ, ಬಸವನಗುಡಿ, ಅರ್ಧನಾರಿಪುರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಮುನಿರಾಜಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜೇಶ್ ಜಿ. ಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸೋಮಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಕುಮಾರ್, ಹನೂರು ವಿಶೇಷ ತಹಶೀಲ್ದಾರ್ ಎಂ. ನಂಜುಂಡಯ್ಯ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಜಗದೀಶ್, ಜಿಲ್ಲಾ ಮತದಾರರ ಜಾಗೃತಿ ಸಮಿತಿ ಸದಸ್ಯ ಸದಾನಂದ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.