ADVERTISEMENT

ನಾಲೆಗೆ ನೀರು ಹರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಜುಲೈ 2017, 7:06 IST
Last Updated 12 ಜುಲೈ 2017, 7:06 IST

ಸಂತೇಮರಹಳ್ಳಿ: ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸುವ ಕ್ರಮ ಖಂಡಿಸಿ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ರೈತರು ಮಂಗಳವಾರ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್, ‘ರಾಜ್ಯ ಬರಗಾಲದಿಂದ ತತ್ತರಿಸುತ್ತಿದೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಜೀವನಾಡಿಗಳಾಗಿರುವ ಕಬಿನಿ, ಕೆಆರ್‌ಎಸ್‌ ಜಲಾಶಯಗಳಲ್ಲಿ ನೀರಿನ ಅಭಾವವಿದೆ. ಈ ಸಂದರ್ಭದಲ್ಲಿ ನೀರು ಬಿಡುಗಡೆ ಖಂಡನಾರ್ಹ ಎಂದು ಹೇಳಿದರು.

ರಾಜ್ಯ ಸರ್ಕಾರ ತಮಿಳುನಾಡು ರೈತರಿಗೆ ಅನುಕೂಲ ಮಾಡಿಕೊಡುತ್ತಿದೆ. ಕುಡಿಯುವ ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಕೃಷಿ ಬೆಳೆಗಳು ಒಣಗಿನಿಂತಿವೆ. ಇದರ ಅರಿವೆ ಇಲ್ಲದಂತೆ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ದೂರಿದರು. ಕಬಿನಿ ಜಲಾಶಯದಿಂದ  14 ರೊಳಗೆ ನಾಲೆಗೆ ನೀರು ಹರಿಸಬೇಕು. ಇಲ್ಲದಿದ್ದರೇ ಪ್ರತಿಭಟನೆ ಚುರುಕು ಗೊಳಿ ಸಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಹೆದ್ದಾರಿ ತಡೆ: ಒಂದು ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿ 209 ರಸ್ತೆತಡೆ ಪ್ರತಿಭಟನೆ ನಡೆದ ಕಾರಣ ಮೈಸೂರು, ಚಾಮರಾಜನಗರ, ಕೊಳ್ಳೇಗಾಲ ಹಾಗೂ ಯಳಂದೂರು ಸ್ಥಳಗಳಿಗೆ ತೆರಳುವ ವಾಹನಗಳಿಗೆ ಅಡಚಣೆ ಉಂಟಾಯಿತು.

ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೂರು ಪ್ರಕಾಶ್, ಬಸವಣ್ಣ, ಬಾಗಳಿ ರೇವಣ್ಣ, ಬಿವಿಎಸ್ ಪರ್ವತರಾಜು, ಗುರುಪ್ರಸಾದ್, ಮೂಕಳ್ಳಿ ಮಹದೇವಸ್ವಾಮಿ, ಶಿವಮೂರ್ತಿ, ಅಂಬಳೆ ಶಿವಕುಮಾರ್, ಹೆಗ್ಗವಾಡಿಪುರ ಮಹದೇವಸ್ವಾಮಿ, ತೆಳ್ಳನೂರು ನಾಗೇಂದ್ರ, ಬಾಣಹಳ್ಳಿ ಮಹೇಶ್, ಎಂ.ಪಿ.ಶಂಕರ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.