ADVERTISEMENT

ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2016, 9:15 IST
Last Updated 30 ಡಿಸೆಂಬರ್ 2016, 9:15 IST

ಚಾಮರಾಜನಗರ: ಸ್ಥಳೀಯ ಸಂಸ್ಥೆಗಳಲ್ಲಿನ ವಾಟರ್‌ಮ್ಯಾನ್‌ಗಳಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿ ಹಾಗೂ ಕಾಯಂಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ಗುರುವಾರ ಕರ್ನಾಟಕ ರಾಜ್ಯ ಸ್ಥಳೀಯ ಸಂಸ್ಥೆಗಳ ವಾಟರ್‌ಮ್ಯಾನ್‌ ಹಾಗೂ ಇತರೆ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು.

ಚಾಮರಾಜೇಶ್ವರ ಸ್ವಾಮಿ ದೇವಸ್ಥಾನ ದಿಂದ ಮೆರವಣಿಗೆ ಆರಂಭಿಸಿದ ಗುತ್ತಿಗೆ ನೌಕರರು ಬಿ. ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾ ಡಳಿತದ ವಿರುದ್ಧ ಘೋಷಣೆ ಕೂಗಿದರು.

ರಾಜ್ಯದ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಪಾಲಿಕೆ ಗಳಲ್ಲಿ ಕಾರ್ಯನಿರ್ವಹಿಸುವ ವಾಟರ್‌ ಮ್ಯಾನ್‌ ಹಾಗೂ ಇತರೆ ಗುತ್ತಿಗೆ ನೌಕರರ ವೇತನವನ್ನು ರಾಜ್ಯ ಕಾರ್ಮಿಕ ಇಲಾಖೆ ಪರಿಷ್ಕರಿಸಿದೆ. ಆದರೆ, ಜಿಲ್ಲೆಯ ಯಾವುದೇ ಸ್ಥಳೀಯ ಸಂಸ್ಥೆಗಳಲ್ಲಿ ಈ ಆದೇಶ ಜಾರಿಯಾಗಿಲ್ಲ ಎಂದು ದೂರಿದರು.

ರಾಜ್ಯ ಸರ್ಕಾರ ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂ ಮಾಡಲು ಹೊರಟಿರುವುದು ಸ್ವಾಗತಾರ್ಹವಾಗಿದೆ. ನಗರದ ಅತ್ಯಂತ ಮುಖ್ಯ ಸೇವೆಯಾದ ಕುಡಿಯುವ ನೀರು ಸರಬರಾಜು ನೌಕರರನ್ನು ಕೂಡಾ ಕಾಯಂ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯದಾದ್ಯಂತ ನಗರಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ 7 ಸಾವಿರ ವಾಟರ್‌ಮ್ಯಾನ್‌ ಹಾಗೂ ಇತರೆ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಎಲ್ಲ ನೌಕರರನ್ನು ಕಾಯಂಗೊಳಿಸಬೇಕು. ರಾಜ್ಯ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹಾಲಿ ಹೊರಗುತ್ತಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ದರು. ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ. ನಾಗಣ್ಣ, ಸಂಚಾಲಕ ವೆಂಕಟೇಶ್‌, ಮುಖಂಡ ರಾದ ಪಿ. ನಿಂಗರಾಜು, ಸಿ. ಸೋಮಣ್ಣ, ಸಿ.ಸತೀಶ್‌, ಎಸ್‌.ಅಭಿಹನಕೆರೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.