ADVERTISEMENT

ಬಹುಗ್ರಾಮ ಕುಡಿಯುವ ನೀರು ಯೋಜನೆ ಪೂರ್ಣಗೊಳಿಸಿ

​ಪ್ರಜಾವಾಣಿ ವಾರ್ತೆ
Published 17 ಮೇ 2017, 5:31 IST
Last Updated 17 ಮೇ 2017, 5:31 IST

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ 166 ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ 131 ಗ್ರಾಮಗಳಿಗೆ ನದಿ ಮೂಲದಿಂದ ಕುಡಿಯುವ ನೀರು ಒದಗಿ ಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಬಾಕಿ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ವಿದ್ಯುತ್ ಸಂಪರ್ಕ ವ್ಯವಸ್ಥೆ ಮತ್ತು ಇತರೆ ಕಾಮಗಾರಿಗಳನ್ನು ಶೀಘ್ರ ಮುಗಿಸಬೇಕು. ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಉದ್ದೇಶಿತ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ನೀರು ಪೂರೈಸುವ ಕೆಲಸ ಆಗಲೇಬೇಕು ಎಂದು ನಿರ್ದೇಶಿಸಿದರು.

ADVERTISEMENT

ನಗರದಲ್ಲಿ ನಡೆಯುತ್ತಿರುವ ಒಳ ಚರಂಡಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದ ಸಚಿವರು, ಇನ್ನೂ ಶೇ 50ರಷ್ಟು ರಿಸೀವಿಂಗ್ ಚೇಂಬರ್ಸ್ ಅಗತ್ಯವಿದ್ದರೆ, ಉನ್ನತ ಅಧಿಕಾರಿಗಳೊಂದಿಗೆ ಸಮಾ ಲೋಚಿಸಿ ಅದಕ್ಕೆ ಬೇಕಾಗುವ ನೆರವನ್ನು ಆದಷ್ಟು ಕೂಡಲೇ ನೀಡಲಾಗುತ್ತದೆ. ಪ್ರಸ್ತುತ ಕೈಗೊಂಡಿರುವ ಕಾಮಗಾರಿ ಯನ್ನು ಮೇ 31ರೊಳಗೆ ಪೂರ್ಣ ಗೊಳಿಸಬೇಕು ಎಂದು ಸೂಚಿಸಿದರು.

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪ್ರಗತಿ ಪರಿಶೀಲಿಸಿದ ಅವರು, ‘ಗ್ರಾಮೀಣ ಭಾಗ ದಲ್ಲಿ ಕೆಲವೆಡೆ ಉದ್ಯೋಗ ನೀಡದೇ ಇರುವ ಬಗ್ಗೆ ನನಗೆ ದೂರುಗಳು ಬಂದಿವೆ. ಬರಗಾಲ ಸಂದರ್ಭದಲ್ಲಿ ಯಾರೂ ಉದ್ಯೋಗ ಅರಸಿ ಹೊರಭಾಗ ಗಳಿಗೆ ತೆರಳಲು ಅವಕಾಶ ನೀಡದೇ ಸ್ಥಳೀಯವಾಗಿ ಕೆಲಸ ನೀಡಿ ಸಕಾಲದಲ್ಲಿ ಹಣ ಪಾವತಿಸಬೇಕು. ಉದ್ಯೋಗ ನೀಡ ದಿರುವ ಬಗ್ಗೆ ಮತ್ತೆ ದೂರುಗಳು ಕೇಳಿ ಬಂದರೆ ಮತ್ತು ನಿಗದಿತ ಗುರಿಗೆ ಅನು ಗುಣವಾಗಿ ಸಾಧನೆ ಮಾಡದಿದ್ದರೆ ಹೋಬಳಿ ನೋಡಲ್ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದು ಕೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ಕೆಲ ಅನುದಾನಿತ ಶಾಲೆ ಗಳಲ್ಲಿ ಈ ಬಾರಿಯ ಎಸ್‍ಎಸ್‍ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ತೀವ್ರ ಕುಸಿತ ಕಂಡುಬಂದಿದೆ. ಸರ್ಕಾರದ ವೇತನ ಪಡೆಯುವ ಶಿಕ್ಷಕರು ಹೇಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಬಗ್ಗೆ ಪರಿ ಶೀಲಿಸಬೇಕಿದೆ.

ಫಲಿತಾಂಶ ಕಡಿಮೆ ಬಂದಿರುವ ಬಗ್ಗೆ ವಿಶ್ಲೇಷಿಸಿ ಕಾರಣ ಗಳನ್ನು ತಿಳಿದುಕೊಳ್ಳಲು ಶೀಘ್ರವೇ ಅನು ದಾನಿತ ಶಾಲೆಗಳ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರ ಸಭೆ ಕರೆಯ ಬೇಕು. ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡ ಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ಮಾಡಲು ತಕ್ಷಣದಿಂದಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಮುಂದಾಗಬೇಕೆಂದು ಹೇಳಿದರು.

ತೋಟಗಾರಿಕೆ, ಮೇವು ಮತ್ತು ಕೃಷಿ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿದ ಸಚಿವರು, ಮಳೆಯಾಗಿರುವ ಪ್ರದೇಶ ದಲ್ಲಿ ರೈತರಿಗೆ ಬಿತ್ತನೆ ಬೀಜ, ರಸ ಗೊಬ್ಬರ, ಇತರೆ ಕೃಷಿ ಪರಿಕರಗಳಿಗೆ ಅಭಾವವಾಗದಂತೆ ನೋಡಿಕೊಳ್ಳ ಬೇಕು. ಜಾನುವಾರುಗಳಿಗೆ ಮೇವು ಕೊರತೆ ಕಾಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಹನೂರು ಭಾಗಕ್ಕೆ ರಾಷ್ಟ್ರೀಯ ಬೀಜ ನಿಗಮದಿಂದ 100 ಟನ್ ಆಲೂಗೆಡ್ಡೆ ಬಿತ್ತನೆ ಬೀಜ ಖರೀದಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯಿಂದ ಮಾಹಿತಿ ಪಡೆದ ಶಾಸಕ ಆರ್.ನರೇಂದ್ರ, ಹೆಚ್ಚು ವರಿ ಬೀಜ ಖರೀದಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕೈಗೊಂಡಿರುವ ಹೆದ್ದಾರಿ ನಿರ್ಮಾಣ ಕಾಮಗಾರಿ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳು ಹಾಗೂ ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.

ಶಾಸಕ ಎಸ್. ಜಯಣ್ಣ, ಜಿಲ್ಲಾಧಿಕಾರಿ ಬಿ.ರಾಮು, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.