ADVERTISEMENT

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 23 ಮೇ 2013, 8:41 IST
Last Updated 23 ಮೇ 2013, 8:41 IST

ಚಾಮರಾಜನಗರ: `ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಗುಣಮಟ್ಟದ ಬೋಧನೆ ಮಾಡುವುದು ಶಿಕ್ಷಕರ ಜವಾಬ್ದಾರಿ' ಎಂದು ಡಯಟ್ ಪ್ರಾಂಶುಪಾಲರಾದ ಗೀತಾಂಬ ಸಲಹೆ ನೀಡಿದರು.

ತಾಲ್ಲೂಕಿನ ಮುರಟಿಪಾಳ್ಯ ಗ್ರಾಮದಲ್ಲಿ ಇತ್ತೀಚೆಗೆ ಶ್ರೀರಾಮಚಂದ್ರ ಉಪಾಧ್ಯಾಯರ ಪ್ರಶಿಕ್ಷಣ ಸಂಸ್ಥೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯದಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ತ್ಯಾಗ, ಭಕ್ತಿ, ಕರ್ತವ್ಯ, ಸಮಯಪ್ರಜ್ಞೆ ಬೆಳೆಸಿಕೊಳ್ಳಬೇಕು. ಆಗಮಾತ್ರ ಭವಿಷ್ಯ ಉಜ್ವಲವಾಗುತ್ತದೆ. ಚಿಣ್ಣರಿಗೆ ಪ್ರಾಥಮಿಕ ಹಂತದಲ್ಲಿಯೇ ಗುಣಮಟ್ಟದ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ತೊಡಕು ಎದುರಾಗುವುದಿಲ್ಲ ಎಂದರು.

ಆಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಂಗಾರನಾಯಕ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಿಂದ ವಿದ್ಯಾರ್ಥಿ ಜೀವನ ಸುಮಧುರವಾಗುತ್ತದೆ. ಸೇವೆಯಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಪ್ರಶಿಕ್ಷಣಾರ್ಥಿಗಳು ಗ್ರಾಮೀಣ ಪರಿಸರದಲ್ಲಿ ಗುರು- ಹಿರಿಯರಿಂದ ಉತ್ತಮ ಮಾರ್ಗದರ್ಶನ ಪಡೆದರೆ ಕಲಿಕೆಗೂ ಅನುಕೂಲವಾಗಲಿದೆ ಎಂದು ಹೇಳಿದರು.

ಡಯಟ್ ಉಪನ್ಯಾಸಕರಾದ ಮನೋಹರ ಮಣಿ ಮಾತನಾಡಿ, ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಂಡರೆ ಆರೋಗ್ಯವೂ ಉತ್ತಮವಾಗಿರುತ್ತದೆ ಎಂದರು.

ಶ್ರೀರಾಮಚಂದ್ರ ವಿದ್ಯಾಸಂಸ್ಥೆಯ ಸದಸ್ಯ ಬಿ. ಮಹದೇವಯ್ಯ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಸಮಯಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದರು.
ಕಾಲೇಜಿನ ಅಧೀಕ್ಷಕ ಆರ್. ಮರಿಮಾದಯ್ಯ ಮಾತನಾಡಿ, `ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ನಾಯಕತ್ವದ ಗುಣ ಬೆಳೆಸಿಕೊಳ್ಳಬಹುದು' ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ವಿ.ಸೋಮ ಶೇಖರಮೂರ್ತಿ, ಸಹ ಶಿಬಿರಾಧಿಕಾರಿ ಕೆ.ಸುನೀತಾ, ದೈಹಿಕ ಶಿಕ್ಷಕ ಆರ್. ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ನಾಗೇಶ್ ಸೋಸ್ಲೆ, ಶಿವಮಾದು, ಎಸ್. ಪಾಲ್, ರಾಜಶೇಖರ್, ಮಂಜುನಾಥ್ ಹಾಜರಿದ್ದರು. ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.