ಚಾಮರಾಜನಗರ: ‘ವಾಲ್ಮೀಕಿ ಜಯಂತಿ ಅಂಗವಾಗಿ ಅ. 5ರಂದು ವಿಧಾನ ಸೌಧದ ಮುಂಭಾಗದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಜನರು ಭಾಗವಹಿಸಬೇಕು’ ಎಂದು ಸಚಿವ ರಮೇಶ ಜಾರಕಿಹೊಳಿ ಶುಕ್ರವಾರ ಮನವಿ ಮಾಡಿದರು. ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ವಾಲ್ಮೀಕಿ ಅವರಏಕ ಶಿಲೆ ಪುತ್ಥಳಿ ಅನಾವರಣ ಕುರಿತ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.
ಪುತ್ಥಳಿ ಅನಾವರಣ ಕಾರ್ಯಕ್ರಮ ಪಕ್ಷಾತೀತವಾದುದು. ಸಮಾಜದ ಸಂಘಟನೆಗೆ ಹೆಚ್ಚಿನ ಜನರು ಸೇರಿದರೆ ಸಮಾಜದ ಬೇಡಿಕೆಯಾದ ಶೇ 7.5ರಷ್ಟು ಮೀಸಲಾತಿ ನೀಡಬೇಕು ಎನ್ನುವ ಸಂದೇಶ ರವಾನೆಯಾಗುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರು, ವಿಧಾನ ಸೌಧದ ದೇವರಾಜ ಅರಸು ಪುತ್ಥಳಿಯ ಬಲಭಾಗದ ಉದ್ಯನವನದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದರು.
ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಎಸ್ಟಿ ಸಮಾಜ ಬಲ ತೋರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಬೇಕು ಎಂದು ತಿಳಿಸಿದರು. ಜಿ.ಪಂ ಅಧ್ಯಕ್ಷ ಎಂ. ರಾಮಚಂದ್ರ ಅವರು, ಜಿಲ್ಲೆಯಿಂದ 10ಸಾವಿರಕ್ಕೂ ಹೆಚ್ಚು ಜನರನ್ನು ಕರೆತರಲಾಗುವುದು ಎಂದು ಭರವಸೆ ನೀಡಿದರು. ಪ್ರಸನ್ನಾನಂದ ಸ್ವಾಮೀಜಿ, ಸಂಸದ ಬಿ.ವಿ ನಾಯಕ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಶ್ವಿನಿ, ಶಿವಮ್ಮ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.