ADVERTISEMENT

‘ಕಾನೂನು ಅರಿವು ಎಲ್ಲರಿಗೂ ಅಗತ್ಯ’

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 9:44 IST
Last Updated 8 ಫೆಬ್ರುವರಿ 2018, 9:44 IST

ಚಾಮರಾಜನಗರ: ‘ಪ್ರತಿಯೊಬ್ಬರಲ್ಲಿ ಕಾನೂನು ಅರಿವು ಮೂಡಿದಾಗ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ’ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಆರ್.ಪಿ.ನಂದೀಶ್‌ ಹೇಳಿದರು.

ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಗ್ರಾಮ ಪಂಚಾಯಿತಿ ಹಾಗೂ ಸಾಧನ ಸಂಸ್ಥೆ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ಅರಿವು–ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಕಾನೂನು ಅನ್ವಯವಾಗುತ್ತದೆ. ಹುಟ್ಟಿದಾಗ ಜನನ ಪ್ರಮಾಣಪತ್ರ, ಸತ್ತ ಮೇಲೆ ಮರಣ ಪ್ರಮಾಣಪತ್ರವೂ ಬೇಕು. ಇದು ಕಾನೂನು ಪ್ರಕಾರ ಅಗತ್ಯವಾಗಿರುವ ದಾಖಲೆಗಳಾಗಿವೆ ಎಂದರು.

ADVERTISEMENT

ಬಡವರಿಗೆ ಉಚಿತ ಕಾನೂನು ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದಲ್ಲಿ ಕಾನೂನು ಸೇವಾ ಪ್ರಾಧಿಕಾರ ರಚಿಸಲಾಗಿದೆ. ಪ್ರಕರಣ ನಡೆಸಲು ಅರ್ಜಿ ನೀಡಿದರೆ ಉಚಿತವಾಗಿ ವಕೀಲರನ್ನು ನೇಮಿಸಲಾಗುತ್ತದೆ. ಜತೆಗೆ, ಲೋಕ ಅದಾಲತ್‌ ಮೂಲಕ ಸಣ್ಣಪುಟ್ಟ ಪ್ರಕರಣಗಳನ್ನು ರಾಜಿ ಮಾಡಲಾಗುತ್ತದೆ. ಈ ಬಗ್ಗೆ ಎಲ್ಲರೂ ತಿಳಿವಳಿಕೆ ಪಡೆಯಬೇಕು ಎಂದು ಸಲಹೆ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶೀಲಾ ಮಾತನಾಡಿ, ಮಹಿಳೆಯ ರಕ್ಷಣೆಗಾಗಿ ಹಲವು ಕಾನೂನುಗಳಿದ್ದು, ಅದರ ಬಗ್ಗೆ ಅರಿವು ಹೊಂದಬೇಕು ಎಂದು ತಿಳಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿವಾಹ ವಿಚ್ಛೇದನ ಪ್ರಕರಣಗಳು ಹೆಚ್ಚು ಬರುತ್ತಿದೆ. ಇದಕ್ಕೆ ಗಂಡ–ಹೆಂಡತಿಯ ನಡುವೆ ಸಾಮರಸ್ಯದ ಕೊರತೆ ಕಾರಣ. ಆದ್ದರಿಂದ ಜೀವನದಲ್ಲಿ ಪರಸ್ಪರ ಅರಿತು ಬಾಳಬೇಕು ಎಂದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಅರುಣ್‌ಕುಮಾರ್‌, ಬಾಲ ನ್ಯಾಯಮಂಡಳಿ ಸದಸ್ಯ ಟಿ.ಜೆ.ಸುರೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೀಮಾ, ಮುಖಂಡ ಗೋವಿಂದರಾಜು, ಅಂಗನವಾಡಿ ಕಾರ್ಯಕರ್ತೆಯರು ಮಹಿಳಾ ಸಂಘದ ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.