ADVERTISEMENT

ಅಕ್ರಮ ಮರಳು : ಕಡಿವಾಣ ಹಾಕಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2017, 8:56 IST
Last Updated 10 ಮಾರ್ಚ್ 2017, 8:56 IST

ಗೌರಿಬಿದನೂರು: ತಾಲ್ಲೂಕಿನ ಉತ್ತರ ಪಿನಾಕಿನಿ ನದಿಯಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪಿನಾಕಿನಿ ನದಿಯಿಂದ ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಆರ್. ಲಕ್ಷ್ಮಿನಾರಾಯಣ ಮಾತನಾಡಿ,  ತಾಲ್ಲೂಕಿನ ಜೀವನಾಡಿಯಾಗಿದ್ದ ಉತ್ತರ ಪಿನಾಕಿನಿ ನದಿಯು ಅಕ್ರಮ ಮರಳು ಗಣಿಗಾರಿಕೆಯಿಂದ ಅಸ್ತಿತ್ವ ಕಳೆದುಕೊಂಡು ನದಿ ಉದ್ದಕ್ಕೂ ಮುಳ್ಳಿನ ಗಿಡಗಳು ಬೆಳೆದಿವೆ. ಈಗ ₹ 2.50 ಕೋಟಿ ವೆಚ್ಚದಲ್ಲಿ ನದಿಯನ್ನು ಪುನಃಶ್ಚೇತನಗೊಳಿಸಲು ಹೊರಟಿ ರು ವುದು ಒಳ್ಳೆಯ ಬೆಳವಣಿಗೆ ಆದರೂ ನದಿಯ ಬದಿಯಲ್ಲಿ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಮರಳು  ಸಾಗಾಣಿಕೆ  ಮೇಲೆ ನಿಷೇಧವಿದ್ದರೂ ರಾತ್ರಿ ಸಮಯದಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಮರಳು ದಂಧೆಯನ್ನು ಕಡ್ಡಾಯವಾಗಿ  ತಡೆಗಟ್ಟಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಲೋಕೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಸನತ್ ಕುಮಾರ್, ಮಂಜುನಾಥ್, ಮುದ್ದರಂಗಪ್ಪ, ಅಶ್ವತ್ಥಗೌಡ, ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.