ಶಿಡ್ಲಘಟ್ಟ: ‘ಬಯಲುಸೀಮೆಗೆ ಕೃಷಿ ಆಧಾರಿತ ನೀರಾವರಿ ಯೋಜನೆ ಜಾರಿಗೊಳಿಸುವ ಸಂಬಂಧ ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜೂನ್ 1ರಂದು ಬೈಕ್ ರ್ಯಾಲಿ ಮೂಲಕ ವಿಧಾನ ಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ರೈತರ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿ ಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ರೈತರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದರು.
‘ಬಯಲುಸೀಮೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕೃಷಿ ಆಧಾರಿತ ನೀರಾವರಿ ಯೋಜನೆ ರೂಪಿಸಬೇಕು ಎಂದು ಎರಡು ದಶಕ ಗಳಿಂದ ಜಿಲ್ಲೆಯಲ್ಲಿ ಹೋರಾಟಗಳನ್ನು ಮಾಡಲಾಗುತ್ತಿದೆ. ಆದರೂ ಸರ್ಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಯೋಜನೆಗಳು ಅನುಷ್ಠಾನವಾಗಿಲ್ಲ’ ಎಂದು ದೂರಿದರು.
‘2015ರಲ್ಲಿ ಜಿಲ್ಲಾ ಕೇಂದ್ರದಲ್ಲಿ 169 ದಿನ ಧರಣಿ ನಡೆಸಲಾಗಿತ್ತು. 2016 ರಲ್ಲಿ ಟ್ರ್ಯಾಕ್ಟರ್ಗಳ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಮ್ಮಿಕೊಳ್ಳಲಾಗಿತ್ತು. ಇದರಿಂದ ಎಚ್ಚೆತ್ತ ಸರ್ಕಾರ ನೀರಾವರಿ ಹೋರಾಟಗಾರರ ಸಭೆ ಕರೆದು ಈ ಭಾಗದ ಜನರ ಬೇಡಿಕೆಯಂತೆ ನೀರಿನ ಮೂಲಗಳ ಅಧ್ಯಯನಕ್ಕೆ ತಜ್ಞರ ಸಮಿತಿ, ಕಾಲ ಕಾಲಕ್ಕೆ ಪರಿಶೀಲನೆಗಾಗಿ ಮೇಲುಸ್ತುವಾರಿ ಸಮಿತಿ, ಕರ್ನಾಟಕ ನೀರಾವರಿ ಸಮಿತಿ ರಚಿಸುವುದಾಗಿ ಮಾತು ನೀಡಿತ್ತು. ಆದರೆ ಈ ಯಾವ ಪ್ರಕ್ರಿಯೆಗಳೂ ಪ್ರಗತಿ ಕಂಡಿಲ್ಲ’ ಎಂದು ಆರೋಪಿಸಿದರು.
ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ತಾದೂರು ಮಂಜುನಾಥ್, ಎಸ್.ಎಂ.ನಾರಾಯಣಸ್ವಾಮಿ, ವೇಣುಗೋಪಾಲ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.