ಮಾಲೂರು: ‘42 ತಿಂಗಳು ಸೆರೆಮನೆಯಲ್ಲಿದ್ದಾಗ ನಿತ್ಯ ಹೇಮರೆಡ್ಡಿ ಮಲ್ಲಮ್ಮನ ಜೀವನ ಚರಿತ್ರೆ ಓದುತ್ತಿದ್ದೆ. ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ’ ಎಂದು ಬಿಜೆಪಿ ಮುಖಂಡ ಗಾಲಿ ಜನಾರ್ದನ ರೆಡ್ಡಿ ತಿಳಿಸಿದರು. ತಾಲ್ಲೂಕಿನ ಚಿಕ್ಕತಿರುಪತಿಯಲ್ಲಿ ಶನಿವಾರ ರೆಡ್ಡಿ ಜನಾಂಗ ಹಮ್ಮಿಕೊಂಡಿದ್ದ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಉದ್ಘಾಟಿಸಿ ಮಾತನಾಡಿದರು.
‘ಮಲ್ಲಮ್ಮ ಅವರು ತಮ್ಮ ಜೀವನದಲ್ಲಿ ಅನುಭವಿಸಿದ ನೋವುಗಳನ್ನು ಮೆಟ್ಟಿ ನಿಲ್ಲುವ ಮೂಲಕ ಶಿವನ ಕೃಪೆಗೆ ಪಾತ್ರರಾಗಿದ್ದರು. ಸಮುದಾಯ ಸೇರಿದಂತೆ ಇತರ ಸಮುದಾಯಗಳ ಬಡವರ ಸೇವಕನಾಗಿ ಕೆಲಸ ಮಾಡುವ ಗುರಿ ಹೊಂದಿದ್ದೇನೆ’ ಎಂದು ಅವರು ಹೇಳಿದರು.
‘ವಿಧಾನಸೌಧ ಮುಂಭಾಗ ಕೆ.ಸಿ.ರೆಡ್ಡಿ ಅವರ ಪ್ರತಿಮೆ ಪ್ರತಿಷ್ಠಾಪಿಸುವಂತೆ ಸಮುದಾಯದಿಂದ ಹಲವು ಸಲ ಮನವಿ ಸಲ್ಲಿಸಲಾಗಿದೆ. ಸರ್ಕಾರ ಕಾನೂನು ತೊಡಕುಗಳನ್ನು ಮುಂದಿಟ್ಟು ವಿಳಂಬ ಮಾಡುತ್ತಿದೆ’ ಎಂದು ದೂರಿದರು.
‘ನಾನು ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಶ್ರಮಿಸುತ್ತಿದ್ದೇನೆ’ ಎಂದು ಹೇಳಿದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಸ್ ಕೃಷ್ಣಾರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು . ಎಂ.ಎ.ನಾರಾಯಣರೆಡ್ಡಿ, ರಾಮಸ್ವಾಮಿರೆಡ್ಡಿ, ಶ್ರೀನಿವಾಸ್ ರೆಡ್ಡಿ, ಎನ್ .ಕೃಷ್ಣಾರೆಡ್ಡಿ, ಕುಂತೂರು ಗೋಪಾಲರೆಡ್ಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.