ADVERTISEMENT

ನೂತನ ಪಿಂಚಣಿ ಯೋಜನೆ ಮರಣ ಶಾಸನ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2017, 9:03 IST
Last Updated 26 ನವೆಂಬರ್ 2017, 9:03 IST

ಶಿಡ್ಲಘಟ್ಟ: ‘ನೂತನ ಪಿಂಚಣಿ ಯೋಜನೆ ಸರ್ಕಾರಿ ನೌಕರರ ಪಾಲಿಗೆ ಮರಣ ಶಾಸನವಾಗಿ ರೂಪುಗೊಂಡಿದೆ’ ಎಂದು ಶಾಸಕ ಎಂ.ರಾಜಣ್ಣ ಹೇಳಿದರುನಗರದಲ್ಲಿ ಶನಿವಾರ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ತಾಲ್ಲೂಕು ಘಟಕದ ವತಿಯಿಂದ ವತಿಯಿಂದ ಏರ್ಪಡಿಸಲಾಗಿದ್ದ ಜಾಗೃತಿ ಸಮಾವೇಶ ಹಾಗೂ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

‘2006ರ ಏಪ್ರಿಲ್ 1ರಿಂದ ಜಾರಿಗೆ ಬಂದಿರುವ ನೂತನ ಪಿಂಚಣಿ ಯೋಜನೆ ಅವೈಜ್ಞಾನಿಕವಾಗಿದೆ. ಇದ ರಿಂದಾಗಿ 2006ರ ನಂತರ ಕೆಲಸಕ್ಕೆ ಸೇರಿದ ಸರ್ಕಾರಿ ನೌಕರರಿಗೆ ನಿವೃತ್ತಿಯ ನಂತರ ನ್ಯಾಯಯುತವಾದ ಪಿಂಚಣಿ ದೊರೆಯುವುದಿಲ್ಲ. ಈ ಸಮಸ್ಯೆ ವಿರುದ್ಧ ಹೋರಾಡಿ ನೌಕರರಿಗೆ ನ್ಯಾಯ ಕೊಡಿಸುವುದಾಗಿ ನಮ್ಮ ಪಕ್ಷದ ಮುಖಂಡರು ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಾಂತಾ ರಾಮ ಮಾತನಾಡಿ, ‘2006ರ ಮೊದಲಿನಂತೆ ಪಿಂಚಣಿ ನೀಡುವುದರಿಂದ ಹೊರೆಯಾಗುತ್ತದೆ ಎಂದು ಸರ್ಕಾರ ಹೇಳುತ್ತದೆ. ನೌಕರರ ವೇತನದಲ್ಲಿ ಕಡಿತಗೊಳಿಸಿದ ಪಿಂಚಣಿ ಮೊತ್ತವನ್ನು ಷೇರು ಮಾರುಕಟ್ಟೆಯಲ್ಲಿ ಹೂಡುವುದರಿಂದ ಹೊರೆಯಾಗುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಸರ್ಕಾರದ ಕಣ್ಣು ತೆರೆಸಲು ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ’ ಎಂದರು.

ADVERTISEMENT

ಸಂಘದ ಪ್ರಧಾನ ಕಾರ್ಯದರ್ಶಿ ನಾಗನಗೌಡ, ಗೌರವ ಸಲಹೆಗಾರ ಹದ್ಲಿ, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗಜೇಂದ್ರ, ನಗರಸಭೆಯ ಪ್ರಭಾರ ಅಧ್ಯಕ್ಷೆ ಪ್ರಭಾವತಿ ಸುರೇಶ್, ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಕೇಶವರೆಡ್ಡಿ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಎನ್ ಪಿಎಸ್ ನೌಕರರ ಸಂಘದ ಉಪಾಧ್ಯಕ್ಷ ತನ್ವೀರ್ ಅಹಮ್ಮದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.