ಬಾಗೇಪಲ್ಲಿ: ವಿದ್ಯಾರ್ಥಿಗಳು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬಲಿಷ್ಠಗೊಳ್ಳಲು ಸಾಧ್ಯ ಎಂದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರವಣಪ್ಪ ತಿಳಿಸಿದರು.
ಪಟ್ಟಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯಿತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪಠ್ಯದ ಕಲಿಕೆಗೆ ಸೀಮಿತವಾಗುತ್ತಿದ್ದಾರೆ. ಇದರಿಂದ ಕ್ರೀಡಾಸಕ್ತಿ ಕಡಿಮೆಯಾಗಿ ದೈಹಿಕವಾಗಿ ದುರ್ಬಲರಾಗುತ್ತಿದ್ದಾರೆ. ಓದುವುದರಿಂದ ಉನ್ನತ ಹುದ್ದೆಗಳಿಗೆ ಹೋಗಬಹುದು ಎಂಬ ಭಾವನೆ ಬಹುತೇಕ ವಿದ್ಯಾರ್ಥಿಗಳಲ್ಲಿದೆ. ಆದರೆ ಕ್ರೀಡೆಗಳಿಂದಲೂ ಉನ್ನತ ಹುದ್ದೆ ಪಡೆಯಲು ಸಾಧ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ದೈಹಿಕ ಶಿಕ್ಷಣಾಧಿಕಾರಿ ವಿ. ಜಯರಾಮ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಹನುಮಂತರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ. ವೆಂಕಟರವಣಪ್ಪ, ಉಪಾಧ್ಯಕ್ಷ ಸಿ. ವೆಂಕಟರಾಯಪ್ಪ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎನ್. ನಾರಾಯಣಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಂಜಿನಪ್ಪ, ಗೌರವಾಧ್ಯಕ್ಷ ಬಿ.ಎನ್. ನಟರಾಜ್, ಇಸಿಒ ರಮೇಶ್, ಶಿಕ್ಷಕ ಎಚ್.ವೆಂಕಟೇಶ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.