ಶಿಡ್ಲಘಟ್ಟ: ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಖಾಲಿ ಮದ್ಯದ ಬಾಟಲಿ ಸಿಕ್ಕರೂ ದಂಡ ವಿಧಿಸಿ, ಎಚ್ಚರಿಕೆ ನೀಡಿ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶಿವಮಲ್ಲಯ್ಯ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ಪೊಲೀಸರಿಂದ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಂಗಡಿಗಳಲ್ಲಿ ಮದ್ಯವನ್ನು ಮಾರಾಟ ಮಾಡುತ್ತಿರುವ ಹಲವಾರು ದೂರುಗಳು ಬರುತ್ತಿರುವ ಕಾರಣ ಅಬಕಾರಿ ಅಧಿಕಾರಿಗಳು ಕ್ರಮ ಜರುಗಿಸಲು ಹಿಂದೆ ಬೀಳಬಾರದು. ಮಕ್ಕಳು ವಿದ್ಯಾಭ್ಯಾಸ ಮಾಡುವ ಶಾಲಾ– ಕಾಲೇಜುಗಳ ಹತ್ತಿರದ ಅಂಗಡಿಗಳ ಬಗ್ಗೆಯೂ ಕಣ್ಣಿಡಬೇಕು ಎಂದರು.
ಬೈರಗಾನಹಳ್ಳಿಯಲ್ಲಿ ಶೌಚಾಲಯ ಕಟ್ಟಿದ್ದರೂ ಹಣ ನೀಡಿಲ್ಲವೆಂದು ನಾರಾಯಣಸ್ವಾಮಿ ದೂರು ನೀಡಿದರು. ದಲಿತ ಮುಖಂಡ ಮುನಯ್ಯ ಉಚಿತ ನಿವೇಶನಗಳು ಕಡುಬಡವರಿಗೆ ಸಿಗುತ್ತಿಲ್ಲ ಉಳ್ಳವರ ಪಾಲಾಗುತ್ತಿದೆ ಎಂದು ಅವರು ದೂರಿದರು.
ಯಣ್ಣೂರು ಬಸವರಾಜ್ ಸಾರ್ವಜನಿಕ ಕಣದ ಸ್ಥಳವನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಮಾತನಾಡಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಭ್ರಷ್ಟಾಚಾರ ನಿಗ್ರಹ ಪೊಲೀಸ್ ಅಧಿಕಾರಿ ಲಕ್ಷ್ಮಿದೇವಿ, ಗ್ರೇಡ್ 2 ತಹಶೀಲ್ದಾರ್ ಮುನಿಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಇಒ ವೆಂಕಟೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.