ಚಿಂತಾಮಣಿ: ಆಧುನಿಕ ಯುಗದಲ್ಲೂ ಮಹಿಳೆಯರಿಗೆ ಸಮಾನತೆ ಸಿಗದಿರುವುದು ಜಗತ್ತಿನ ದೊಡ್ಡ ದುರಂತ ಎಂದು ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ರಾಜ್ಯ ಘಟಕದ ಅಧ್ಯಕ್ಷ ಎಂ.ವಿ.ತ್ಯಾಗರಾಜ್ ಅಭಿಪ್ರಾಯಪಟ್ಟರು.
ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ನಗರದ ಪ್ರೀತಿ ಪಬ್ಲಿಕ್ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಪ್ರಜಾಪ್ರಭುತ್ವದ ಆಡಳಿತವಿದ್ದರೂ ಮಹಿಳಾ ಮೀಸಲಾತಿ ಜಾರಿಗೆ ಬರದಿರುವುದು ವಿಷಾದನೀಯ. ಮಹಿಳೆಯರಿಗೆ ರಾಜಕೀಯ, ಸಾಮಾಜಿಕ, ಆಡಳಿತ, ಸಾಹಿತ್ಯ ಕ್ಷೇತ್ರಗಳಲ್ಲೂ ಅನ್ಯಾಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ತಾಲ್ಲೂಕು ಕನ್ನಡ ಸ್ವಾಭಿಮಾನಿ ಸೇವಾ ಸಮಿತಿಯ ಅಧ್ಯಕ್ಷೆ ಪ್ರೊ.ಸಿ.ಅಶ್ವತ್ಥಮ್ಮ ಮಾತನಾಡಿ, ಸ್ತ್ರೀ–ಪುರುಷರಿಗೆ ಸಮಾನ ಸ್ಥಾನ ಮಾನ ದೊರೆತಾಗ ಮಾತ್ರ ಸಮಾಜದ ನಿರ್ಮಾಣ ಹಾಗೂ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪ್ರೀತಿ ಪಬ್ಲಿಕ್ ವಿದ್ಯಾಸಂಸ್ಥೆಯ ಅಧ್ಯಕ್ಷೆ ಕೆ.ಆರ್.ಮಾಲತಿ, ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಬಿ.ಹನುಮಂತಪ್ಪ, ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಪಿ.ನವಮೋಹನ್, ನಾಗರಾಜಾರಾವ್, ವೆಂಕಟೇಶ್, ಪದಾಧಿಕಾರಿಗಳಾದ ಹಸೀನಾಬೇಗಂ, ಕೆ.ಎನ್.ಅಕ್ರಂಪಾಷಾ, ಮೈಲಾಪುರ ನಾರಾಯಣಸ್ವಾಮಿ, ಕಂಪನಿ ದೇವರಾಜ್, ರೇಣುಕಮ್ಮ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಜನಾರ್ಧನರೆಡ್ಡಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ವೆಂಕಟರಾಮರೆಡ್ಡಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.