ADVERTISEMENT

ಮಾನವೀಯ ಮೌಲ್ಯದ ಕೊರತೆ: ಆತಂಕ

​ಪ್ರಜಾವಾಣಿ ವಾರ್ತೆ
Published 23 ಜುಲೈ 2017, 10:51 IST
Last Updated 23 ಜುಲೈ 2017, 10:51 IST

ಗೌರಿಬಿದನೂರು: ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಇಲ್ಲದಂತಾಗುತ್ತಿದೆ. ಇದು ಆತಂಕಕಾರಿ ಸಂಗತಿ ಎಂದು ವಿಧಾನಸಭಾ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಎಂದು ಹೇಳಿದರು.

ಪಟ್ಟಣದ ಡಾ.ಎಚ್.ಎನ್. ಕಲಾಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗುಣಮಟ್ಟದ ಫಲಿತಾಂಶ ಪಡೆಯುವ ಕುರಿತು ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರಿಗಾಗಿ ಶನಿವಾರ ಏರ್ಪಡಿಸಿದ್ದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ನಾಲ್ಕು ಗೋಡೆಗಳ ಮಧ್ಯೆ ಪಠ್ಯಪುಸ್ತಕದಲ್ಲಿನ ವಿಷಯದ ಪಾಠ ಮಾಡುವುದಷ್ಟೇ ಬೋಧನೆ ಅಲ್ಲ. ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು. ಶಿಕ್ಷಕರು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳವ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸರ್ಕಾರಿ ಶಾಲೆಗಳಲ್ಲಿಯೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಎಂದು ಹೇಳಿದರು.

ADVERTISEMENT

ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ತಾಲ್ಲೂಕಿನಲ್ಲಿ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫಲಿತಾಂಶ ಸಾಕಷ್ಟು ಕುಸಿದಿದೆ. ಈ ಬಾರಿ ಹೆಚ್ಚಿನ ಫಲಿತಾಂಶ ಪಡೆಯಲು ಶಿಕ್ಷಕರು ಶ್ರಮಿಸಬೇಕಾಗಿದೆ ಎಂದರು.

ದಿವ್ಯಜ್ಞಾನಾನಂದ ಸ್ವಾಮೀಜಿ ಮಾತನಾಡಿ, ಆಧುನಿಕ ಬದುಕಿನಲ್ಲಿ ಶಿಕ್ಷಕರು ಒತ್ತಡಗಳಿಗೆ ಒಳಗಾಗಿ ತಮ್ಮ ಏಕಾಗ್ರತೆ ಹಾಗೂ ಸಂಯಮ ಕಳೆದುಕೊಳ್ಳುವಂತಾಗಿದೆ. ಪ್ರತಿನಿತ್ಯ ಧ್ಯಾನ, ಯೋಗ, ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಅದು ಮೂಲಕ ಪರೋಕ್ಷವಾಗಿ ವಿದ್ಯಾರ್ಥಿಗಳ ಮೇಲೆ ಉತ್ತಮ ಪರಿಣಾಮ ಬೀರಲಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಡಿಡಿಪಿಐ ಟಿ.ಅಶ್ವತ್ಥರೆಡ್ಡಿ, ಪುರಸಭೆ ಅಧ್ಯಕ್ಷ ಕಲೀಂಉಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಬಯ್ಯಪ್ಪರೆಡ್ಡಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಗಂಗರೆಡ್ಡಿ, ಪ್ರೌಢಶಾಲೆ ಶಿಕ್ಷಕರ ಸಂಘದ ಕಾರ್ಯದರ್ಶಿ ಆದರ್ಶ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.