ADVERTISEMENT

ರಾಜಕಾರಣ ಕೊಳೆತಿದೆ, ಮಕ್ಕಳಿಗೆ ಅಂಟಿಸಬೇಡಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2017, 7:31 IST
Last Updated 8 ಆಗಸ್ಟ್ 2017, 7:31 IST

ಬಾಗೇಪಲ್ಲಿ: ‘ಇವತ್ತು ರಾಜಕಾರಣ ಕೊಳೆತು ನಾರುತ್ತಿದೆ. ಹೀಗಾಗಿ ಮಕ್ಕಳನ್ನು ರಾಜಕೀಯಕ್ಕೆ ತರಬೇಡಿ. ಅದರ ಬದಲು ಉತ್ತಮ ಶಿಕ್ಷಣ ಕೊಡಿಸಿ ಉನ್ನತ ಸ್ಥಾನಗಳನ್ನು ಅಲಂಕರಿಸುವಂತೆ ನೋಡಿಕೊಳ್ಳಿ’ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಈ ಹಿಂದೆ ಉನ್ನತ ಶಿಕ್ಷಣ ಬರೀ ಶ್ರೀಮಂತರಿಗೆ ಮಾತ್ರ ಸೀಮಿತವಾಗಿತ್ತು. ಬದಲಾದ ಕಾಲಘಟ್ಟದಲ್ಲಿ ಪ್ರತಿಭಾವಂತರಾದ ಯಾರು ಬೇಕಾದರೂ ಉನ್ನತ ಶಿಕ್ಷಣ ಪಡೆಯಬಹುದಾಗಿದೆ’ ಎಂದು ತಿಳಿಸಿದರು.

ಮುಖಂಡ ನಾಗರಾಜಪ್ಪ ಮಾತನಾಡಿ, ‘ವಿದ್ಯಾರ್ಥಿಗಳು ಗುರಿ ಮುಟ್ಟಿ, ಉನ್ನತ ಹುದ್ದೆಗಳನ್ನು ಅಲಂಕರಿಸಿದಾಗ ತಮಗೆ ಸಹಾಯ ಮಾಡಿದವರನ್ನು ಸ್ಮರಿಸಿಕೊಳ್ಳುವ ಜತೆಗೆ ಗೌರವಿಸುವ ಕೆಲಸ ಮಾಡಬೇಕು’ ಎಂದರು.

ADVERTISEMENT

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಾಯಕ ಸಮುದಾಯದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಬೂರಗಮಡಗು ನರಸಿಂಹಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರವಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.