ADVERTISEMENT

ಹಕ್ಕುಗಳ ಉಲ್ಲಂಘನೆ ತಡೆಯಲು ಅರಿವು ಮೂಡಿಸಿ

ಮಾನವ ಹಕ್ಕುಗಳ ಜಾಗೃತಿ ಸಮಿತಿ ಸಭೆಯಲ್ಲಿ ಸಮೇತನಹಳ್ಳಿ ಲಕ್ಷ್ಮಣ ಸಿಂಗ್ ಸಲಹೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2017, 11:28 IST
Last Updated 6 ಮಾರ್ಚ್ 2017, 11:28 IST
ಚಿಕ್ಕಬಳ್ಳಾಪುರ: ‘ಸಮಾಜದಲ್ಲಿ ಜಾತಿ, ಧರ್ಮ, ವೈಚಾರಿಕತೆಯ ಹೆಸರಿನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ತಡೆಗಟ್ಟುವ ನಿಟ್ಟಿನಲ್ಲಿ ಹಕ್ಕುಗಳ ರಕ್ಷಣೆ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ಮಾನವ ಹಕ್ಕುಗಳ ಜಾಗೃತಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಸಮೇತನಹಳ್ಳಿ ಲಕ್ಷ್ಮಣ ಸಿಂಗ್ ಹೇಳಿದರು. 
 
ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸಮಿತಿಯ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
‘ದೇಶದಲ್ಲಿ ಮಾನವೀಯ ಮೌಲ್ಯಗಳ ಕುರಿತು ಮಾತನಾಡುವವರಿಗೆ ಉಳಿಗಾಲವಿಲ್ಲದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ವಿಚಾರವಾದಿಗಳಾದ ನರೇಂದ್ರ ಧಾಬೋಲ್ಕರ್, ಗೋವಿಂದ್ ಪನ್ಸಾರೆ, ಎಂ.ಎಂ.ಕಲಬುರ್ಗಿ ಸೇರಿದಂತೆ ಅನೇಕ ಚಿಂತಕರ ಹತ್ಯೆಗಳು ನಡೆದಿವೆ. ಹಂತಕರನ್ನು ಹಿಡಿಯುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದರು.
 
‘ಈ ಜಿಲ್ಲೆ ತೀವ್ರ ಬರಗಾಲದಿಂದ ತತ್ತರಿಸಿದೆ. ಈವರೆಗೂ ಜಿಲ್ಲಾಡಳಿತ ಸಮರ್ಪಕವಾದ ಬರ ನಿರ್ವಹಣೆ ಕಾಮಗಾರಿ ಪ್ರಾರಂಭಿಸಿಲ್ಲ. ಜನ, ಜಾನುವಾರುಗಳಿಗೆ ಸೂಕ್ತ ನೀರು ಮತ್ತು ಮೇವಿನ ವ್ಯವಸ್ಥೆ ಮಾಡಿಲ್ಲ. ರೈತರು ದನಕರುಗಳನ್ನು ಕಡಿಮೆ ಬೆಲೆಗೆ ಕಸಾಯಿಖಾನೆಗಳಿಗೆಮಾರಾಟ ಮಾಡು ತ್ತಿದ್ದಾರೆ. ಈ ದಯನೀಯ ಸ್ಥಿತಿಗೆ ಸರ್ಕಾರ ಈ ಕೂಡಲೆ ಪರಿಹಾರ ಒದಗಿಸಬೇಕು’ ಎಂದು ಆಗ್ರಹಿಸಿದರು.
 
‘ಗುಡಿಬಂಡೆ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಯ ಕುರಿತು ಎದ್ದಿರುವ ಅನುಮಾನಗಳ ಕುರಿತು ತನಿಖೆ ನಡೆಸಿ, ವಿದ್ಯಾರ್ಥಿ ಸಾವಿನ ನೈಜ ಕಾರಣಗಳನ್ನು ಕಂಡುಹಿಡಿಯಬೇಕು’ ಎಂದು ಒತ್ತಾಯಿಸಿದರು.
 
ಕಿಸಾನ್ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಾತವಾರ ರಾಮಕೃಷ್ಣಪ್ಪ, ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷೆ ಸುನೀತಾ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಷಾ, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಘಟಕದ ಮಾಧ್ಯಮ ಸಲಹೆಗಾರ ಕಾಂತರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.