ಬಾಗೇಪಲ್ಲಿ: ತಾಲ್ಲೂಕಿನಲ್ಲಿ ಸತತವಾಗಿ ಬರಗಾಲ ಆವರಿಸಿದ್ದರೂ ಸರ್ಕಾರವು ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣ ಫೆ. 10ರಂದು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮಣರೆಡ್ಡಿ ತಿಳಿಸಿದರು.
ರೈತರ ಸಮಸ್ಯೆಗಳ ಹಾಗೂ ಕುಂದು– ಕೊರತೆಗಳ ಬಗ್ಗೆ ಸಭೆ ಕರೆಯುವಂತೆ ಜಿಲ್ಲೆಯ ಉಸ್ತುವಾರಿ ಮಂತ್ರಿಗಳಿಗೆ ಮನವಿ ಮಾಡಿ ಎರಡು ತಿಂಗಳು ಕಳೆದರೂ ಸ್ಪಂದನೆ ಸಿಗಲಿಲ್ಲ. ಬರಗಾಲ ಆವರಿಸಿರುವುದರಿಂದ ದನ– ಕರುಗಳಿಗೆ ನೀರು, ಮೇವು ಕೊರತೆ ನೀಗಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
ರೈತರ ಸಾಲ ಸಂಪೂರ್ಣ ಮನ್ನಾ ಮಾಡಿ ಪ್ರತಿ ಎಕರೆಗೆ ₹ 25 ಸಾವಿರ ಬೆಳೆ ನಷ್ಟ ಪರಿಹಾರ ನೀಡಬೇಕು. ನಮೂನೆ 53ರಲ್ಲಿ ಅರ್ಜಿ ಹಾಕಿರುವ ರೈತರಿಗೆ ಸಾಗುವಳಿ ಚೀಟಿ, ಕೆ.ಜಿಗೆ ₹1 ದರದಲ್ಲಿ ಮೇವು ಮತ್ತು ಪಶು ಆಹಾರ ಒದಗಿಸುವುದು. ದುಬಾರಿದರಕ್ಕೆ ಮಾರಾಟ ಮಾಡುತ್ತಿರುವ ಪಶು ಆಹಾರ ಮಾರಾಟಗಾರರಿಗೆ ಕಡಿವಾಣ ಹಾಕಬೇಕು ಎಂದರು.
ಪ್ರತಿ ಗ್ರಾಮಗಳಲ್ಲಿ ಜಾನುವಾರುಗಳಿಗೆ ನೀರಿನ ಟ್ಯಾಂಕ್ ನಿರ್ಮಾಣ, ಅರ್ಹ ರೈತರಿಗೆ ಸಹಾಯಧನ ಹಾಗೂ ಪ್ರೋತ್ಸಾಹ ಧನಗಳನ್ನು ಕೂಡಲೇ ಬಿಡುಗಡೆ ಮಾಡಬೇಕು, ಕೆರೆ ಅಂಗಳ ಒತ್ತುವರಿ, ಪೋಷಕ ಕಾಲುವೆ ದುರಸ್ತಿ ಹಾಗೂ ಕೆರೆ ಅಂಗಳ ಜಾಲಿಮರಗಳನ್ನು ತೆರೆವುಗೊಳಿಸಬೇಕು ಎಂದು ಒತ್ತಾಯಿಸಿದರು.
ಕೆಆರ್ಆರ್ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಳ್ಳಿ ಬೈರೇಗೌಡ, ಪ್ರಧಾನ ಕಾರ್ಯದರ್ಶಿ ಮಂಡಿಕಲ್ಲು ವೇಣು, ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ರಾಮಾಂಜಿನಪ್ಪ, ಚಿಂತಾಮಣಿ ತಾಲ್ಲೂಕು ಘಟಕದ ಅಧ್ಯಕ್ಷ ಆಂಜನೇಯರೆಡ್ಡಿ, ಗೌರಿಬಿದನೂರು ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹರೆಡ್ಡಿ, ಶಿಡ್ಲಘಟ್ಟ ತಾಲ್ಲೂಕು ಘಟಕದ ಅಧ್ಯಕ್ಷ ತಾದೂರು ಮಂಜುನಾಥ, ಗುಡಿಬಂಡೆ ತಾಲ್ಲೂಕು ಘಟಕದ ಅಧ್ಯಕ್ಷ ರಾಮನಾಥರೆಡ್ಡಿ ಮತ್ತಿತರರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.