ADVERTISEMENT

ಈಡೇರದ ನಿರುದ್ಯೋಗಿಗಳ ಕನಸು

ಕೆ.ವಿ.ನಾಗರಾಜ್
Published 24 ನವೆಂಬರ್ 2017, 6:49 IST
Last Updated 24 ನವೆಂಬರ್ 2017, 6:49 IST
ನರಸಿಂಹರಾಜಪುರ ತಾಲ್ಲೂಕು ಲಿಂಗಾಪುರ ಗ್ರಾಮದಲ್ಲಿ ಪಾಳುಬಿದ್ದು ಅಭಿವೃದ್ಧಿ ಪಡಿಸಿದ ಕೈಗಾರಿಕಾ ವಸಾಹತು ಪ್ರದೇಶ.
ನರಸಿಂಹರಾಜಪುರ ತಾಲ್ಲೂಕು ಲಿಂಗಾಪುರ ಗ್ರಾಮದಲ್ಲಿ ಪಾಳುಬಿದ್ದು ಅಭಿವೃದ್ಧಿ ಪಡಿಸಿದ ಕೈಗಾರಿಕಾ ವಸಾಹತು ಪ್ರದೇಶ.   

ನರಸಿಂಹರಾಜಪುರ: ತಾಲ್ಲೂಕಿನ ಲಿಂಗಾಪುರ ಹಾಗೂ ಹಿಳುವಳ್ಳಿ ಗ್ರಾಮದಲ್ಲಿ ರಾಜ್ಯ ಸಣ ್ಣಕೈಗಾರಿಕೆಗಳ ನಿಗಮದಿಂದ ಸುಮಾರು ₹1.30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗದೆ ಪಾಳು ಬಿದ್ದಿದ್ದು, ಇದರಿಂದ ನಿರುದ್ಯೋಗಿಗಳ ಕನಸು ನನಸಾಗುವ ಕಾಲ ದೂರವಾಗಿದೆ.

ಗ್ರಾಮೀಣ ಭಾಗದ ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿ, ಗ್ರಾಮೀಣ ಪ್ರದೇಶದ ಪ್ರತಿಭಾ ಪಲಾಯನವನ್ನು ತಡೆಗಟ್ಟುವ ಉದ್ದೇಶದಿಂದ ಒಟ್ಟು 10 ಎಕರೆ ಪ್ರದೇಶದಲ್ಲಿ ಕೈಗಾರಿಕಾ ವಸಾಹತು ಪ್ರದೇಶವನ್ನು ಈಗಾಗಲೇ ನಿರ್ಮಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗಾರಿಕೆಗಳನ್ನು ನಿರ್ಮಿಸಲು ಅನುಕೂಲವಾಗುವಂತೆ ಈ ಪ್ರದೇಶಕ್ಕೆ ವಿದ್ಯುತ್, ನೀರು, ರಸ್ತೆ ಮುಂತಾದ ಮೂಲ ಸೌಕರ್ಯಗಳನ್ನು ಒದಗಿಸಲಾಗಿತ್ತು. ಆದರೆ, ಕೈಗಾರಿಕೆಯನ್ನು ಸ್ಥಾಪಿಸಲು ಉದ್ಯಮಿಗಳು ಮೀನಮೇಷ ಮಾಡಿದ್ದರಿಂದ ಕೈಗಾರಿಕಾ ಪ್ರದೇಶದಲ್ಲಿ ಪ್ರಸ್ತುತ ಕಾಡು ಬೆಳೆಯುತ್ತಿದೆ.

ಕೈಗಾರಿಕಾ ವಸಾಹತು ಪ್ರದೇಶ ನಿರ್ಮಾಣಗೊಂಡು ಆರು ವರ್ಷಕ್ಕೂ ಅಧಿಕ ಅವಧಿ ಕಳೆದಿದ್ದರೂ ಇದರ ಅಧಿಕೃತ ಉದ್ಘಾಟನೆ ಇದುವರೆಗೂ ನಡೆದಿಲ್ಲ. ಇಲ್ಲಿ ಅಳವಡಿಸಿದ್ದ ವಿದ್ಯುತ್ ದೀಪಗಳೆಲ್ಲವೂ ಹಾಳಾಗಿ ಹೋಗಿದೆ. ಮಾತ್ರವಲ್ಲ, ಈ ಪ್ರದೇಶ ಹಾಳು ಕೊಂಪೆಯಾಗಿದ್ದು, ಅನೈತಿಕ ಚಟುವಟಿಕೆಗಳ ಕೇಂದ್ರವಾಗಿದೆ.

ADVERTISEMENT

ಮಲೆನಾಡಿನ ಭಾಗದಲ್ಲಿ ಕೃಷಿ ಪ್ರಮುಖ ವೃತ್ತಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ರಬ್ಬರ್, ಅಡಿಕೆ ಬೆಳೆಯುತ್ತಿರುವುದರಿಂದ ಇದಕ್ಕೆ ಸಂಬಂಧಪಟ್ಟ ಕೈಗಾರಿಕೆ, ಅಡಿಕೆ ತಯಾರಿಕೆ ಸಿದ್ಧ ಉಡುಪು ತಯಾರಿಕಾ ಘಟಕ ಮುಂತಾದ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ವಿಪುಲ ಅವಕಾಶವಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಉತ್ತೇಜನ ನೀಡುವ ಅವಶ್ಯಕತೆಯಿದೆ ಎನ್ನುತ್ತಾರೆ ಸ್ಥಳೀಯರು.

ಅರಣ್ಯ ಇಲಾಖೆಯು ಕೈಗಾರಿಕಾ ವಸಾಹತು ಸ್ಥಾಪನೆಯಾಗುವವರೆಗೆ ಯಾವುದೇ ಚಕಾರ ಎತ್ತದೆ ಏಕಾಏಕಿ 1940ರ ಮುಂಚಿನ ಮಹಾರಾಜರ ಕಾಲದ ಆದೇಶವನ್ನು ಮುಂದಿಟ್ಟುಕೊಂಡು, ಸದರಿ ಪ್ರದೇಶ ಕಿರು ಅರಣ್ಯ ವ್ಯಾಪ್ತಿಗೆ ಸೇರಿದ್ದು ಎಂದು ತಡೆಯೊಡ್ಡಿದ ಪರಿಣಾಮವಾಗಿ ಕೈಗಾರಿಕೆ ಸ್ಥಾಪನೆಗೆ ಮುಂದೆ ಬಂದವರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗಿಲ್ಲ ಎನ್ನುತ್ತವೆ ಮೂಲಗಳು.

ಜಿಲ್ಲಾಧಿಕಾರಿಯು ಕೈಗಾರಿಕಾ ವಸಾಹತು ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಿದ ಮೇಲೆ ಇಲಾಖೆಯಿಂದ ಹೂಡಿಕೆ ಮಾಡಿ
10 ಎಕರೆ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗಿತ್ತು. ‘ತಮಗೆ ಸೇರಿದ ಜಾಗದಲ್ಲಿ ಕೈಗಾರಿಕಾ ವಸಾಹತು ನಿರ್ಮಾಣವಾಗಿರುವುದರಿಂದ ಇದಕ್ಕೆ ಬದಲಿಯಾಗಿ ಬೇರೆ ಜಾಗ ಕೊಡಬೇಕು’ ಎಂದು ಅರಣ್ಯ ಇಲಾಖೆಯವರು ಹೇಳುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರಿಗೆ ಪತ್ರಬರೆದು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ ಎಂದು ಶಿವಮೊಗ್ಗದಲ್ಲಿರುವ ರಾಜ್ಯ ಸಣ್ಣ ಕೈಗಾರಿಕಾ ನಿಗಮದ ಸಹಾಯಕ ವ್ಯವಸ್ಥಾಪಕ ಶಿವಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪಿಸಲು ಉದ್ಯಮಿಗಳು ಮುಂದೆ ಬಂದಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಹಣವನ್ನು ಪಾವತಿ ಮಾಡಿದ್ದರೂ ಅರಣ್ಯ ಇಲಾಖೆಯ ಆಕ್ಷೇಪದಿಂದ ಸಮಸ್ಯೆಯಾಗಿದೆ ಎನ್ನುತ್ತಾರೆ ಕೈಗಾರಿಕಾ ವಿಸ್ತರಣಾಧಿಕಾರಿ ಚಂದ್ರಶೇಖರ್.

ಕೇವಲ ದೊಡ್ಡ ನಗರಗಳಲ್ಲಿ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ಕೈಗಾರಿಕೆಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗುವುದರ ಬದಲು, ಇಂತಹ ಹಿಂದುಳಿದ ಪ್ರದೇಶಗಳಲ್ಲಿ ಕೈಗಾರಿಕೆ ಸ್ಥಾಪಿಸಲು ನಿಯಮ ರೂಪಿಸಿದರೆ ಪ್ರಾದೇಶಿಕ ಅಸಮತೋಲನವೂ ಸೇರಿದಂತೆ ನಿರುದ್ಯೋಗ ಸಮಸ್ಯೆಯೂ ಬಗೆಹರಿಯುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.