ADVERTISEMENT

ಕಳಪೆ ಕಾಮಗಾರಿ: ಅಸಮಾಧಾನ

ಕಾಲೇಜು ಕಟ್ಟಡ ಉದ್ಘಾಟಿಸಿದ ಸಚಿವ ಡಾ.ಜಿ.ಪರಮೇಶ್ವರ್

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2017, 5:55 IST
Last Updated 22 ಏಪ್ರಿಲ್ 2017, 5:55 IST
ಕಡೂರು: ಸಖರಾಯಪಟ್ಟಣ ಪ್ರಥಮ ದರ್ಜೆ ಕಾಲೇಜು  ನಿರ್ಮಾಣದಲ್ಲಿ ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರ ನನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು. 
 
ಶುಕ್ರವಾರ ತಾಲ್ಲೂಕಿನ ಸಖರಾಯ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಲು ಬಂದಿದ್ದ ಸಚಿವ ಡಾ.ಜಿ.ಪರಮೇಶ್ವರ್ ಅವರು, ಕಾಲೇಜಿನ ಕಟ್ಟಡದ ಕಳಪೆ ಕಾಮಗಾರಿ ಕಂಡು ಅಸಮಾಧಾನದಿಂದಲೇ ಉದ್ಘಾಟಿಸಿದರು.  
 
ಕಟ್ಟಡ ಕಾಮಗಾರಿ ಕಳಪೆಯಾಗಿರುವುದು ಸ್ಪಷ್ಟವಾಗಿ ಕಾಣುತ್ತಿದ್ದರೂ ಅದನ್ನು ಹೇಗೆ ಹಸ್ತಾಂತರ ಮಾಡಿಕೊಂಡಿರಿ ಎಂದು  ಪ್ರಾಂಶುಪಾಲ ಮಲ್ಲಿಕಾರ್ಜುನ್ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ಕಟ್ಟಡ ನಿರ್ಮಾಣಮಾಡಿದ ಗುತ್ತಿಗೆದಾರರನ್ನು ಕೂಡಲೇ ಕಪ್ಪು ಪಟ್ಟಿಗೆ ಸೇರಿಸಿ ಎಂದು ಜಿಲ್ಲಾಧಿಕಾರಿ ಸತ್ಯವತಿ ಅವರಿಗೆ ಸೂಚಿಸಿದರು.
 
ನಂತರ ಸಖರಾಯಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವರು ಭೇಟಿ ನೀಡಿದಾಗ, ಗ್ರಾಮ ಪಂಚಾಯಿತಿ ಅಧ್ಯಕ್ಷ ಯೋಗೀಂದ್ರ ಅವರು, ಈ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು, ಹಾಗೂ ದೊಡ್ಡಗ್ರಾಮ ಪಂಚಾಯಿತಿ ಆಗಿರುವುದರಿಂದ ಹೆಚ್ಚಿನ ಅನುದಾನ ನೀಡಲು ಮನವಿ ಸಲ್ಲಿಸಿದರು. ಈ ಬಗ್ಗೆ ಸಂಬಂಧಿಸಿದವರ ಗಮನಕ್ಕೆ ತರುವುದಾಗಿ ಸಚಿವರು ತಿಳಿಸಿದರು.
 
ಹೆಚ್ಚುವರಿ ಜಿಲ್ಲಾಧಿಕಾರಿ ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್,  ಕಾರ್ಯನಿರ್ವ ಹಣಾಧಿಕಾರಿ ಡಾ.ಆರ್.ರಾಗಪ್ರಿಯಾ, ತರೀಕೆರೆ ಉಪ ವಿಭಾಗಾಧಿಕಾರಿ ಸರೋಜ, ತಹಶೀಲ್ದಾರ್ ಎಂ.ಭಾಗ್ಯ, ಕಡೂರು ಸಿಪಿಐ ಸತ್ಯನಾರಾಯಣ್, ಶಾಸಕ ಸಿ.ಟಿ.ರವಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಕುಂತಲಾ ಮಲ್ಲಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಆನಂದ್ ನಾಯ್ಕ್, ಮಾಜಿ ಶಾಸಕಿ ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಡಿ.ಎಲ್.ವಿಜಯ್ ಕುಮಾರ್ ಮತ್ತಿತರರು ಇದ್ದರು.
***
ಜನರು ಗುಳೆ ಹೋಗಬಾರದು: ಮನವಿ
ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿ ಮನೆ ಸತೀಶ್ ಅವರ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ‘ಬರ ಪರಿಸ್ಥಿತಿಯನ್ನು ಸರ್ಕಾರ ಸಮರ್ಥ ವಾಗಿ ನಿರ್ವಹಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಬಗ್ಗೆ ನಿರಂತರ ಗಮನ ಕೊಡುತ್ತಿದ್ದೇನೆ.

ಇಡೀ ಜಿಲ್ಲೆಯಲ್ಲಿ ಬರ ತೀವ್ರವಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಗಾಗಿ ಜಿಲ್ಲೆಗೆ ₹11.60 ಕೋಟಿ ಸರ್ಕಾರ ನೀಡಿದೆ. ಬರಗಾಲ ನಿರ್ವಹಣೆಗೆ ಹಣದ ಕೊರತೆಯಿಲ್ಲ. ಆದರೆ ಸಮಸ್ಯೆಯಿರುವುದು ಕೊಳವೆ ಬಾವಿ ಕೊರೆಸಿದರೂ ನೀರು ಬಾರದಿರುವುದು.
 
ಆದ್ದರಿಂದ ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ನೀಡುವ ವ್ಯವಸ್ಥೆ ಮಾಡಿದ್ದೇವೆ. ಜನರು ಗುಳೆ ಹೋಗಬಾರದು, ಜಾನುವಾರು ಹಸಿವಿನಿಂದ ಸಾಯುವಂತಹ ಪರಿಸ್ಥಿತಿ ಬರಬಾರದು ಎಂಬುದು ನಮ್ಮ ಆಶಯ’ ಎಂದರು.

ಕಡೂರು ತಾಲ್ಲೂಕನ್ನು ಉಸ್ತುವಾರಿ ಸಚಿವರು ಕಡೆಗಣಿಸಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, ‘ಯಾವ ತಾಲ್ಲೂಕನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಕಡೂರು ಪ್ರದೇಶದಲ್ಲಿ ಈ ಮೊದಲೇ ಬರ ಅಧ್ಯಯನ ಪ್ರವಾಸ ಮಾಡಿದ್ದೇನೆ. ಮೇಲಾಗಿ ಅಲ್ಲಿನ ಸ್ಥಳೀಯ ಶಾಸಕರು ಸಹ ತಾಲ್ಲೂಕಿನ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಸೂಕ್ತ ಕ್ರಮಗಳನ್ನು ಸರ್ಕಾರ ಮತ್ತು ಸ್ಥಳೀಯ ಜಿಲ್ಲಾಡಳಿತ ತೆಗೆದುಕೊ ಳ್ಳುತ್ತಿದೆ’ ಎಂದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.