ಚಿಕ್ಕಮಗಳೂರು: ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಎಂ.ಸಿ. ಅಶೋಕ್ ಇಲ್ಲಿ ಶುಕ್ರವಾರ ತಿಳಿಸಿದರು.
‘ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಯುವ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ. 30 ವರ್ಷಗಳಿಂದ ಪಕ್ಷ ಸಂಘಟನೆಗೆ ನಿಷ್ಠೆಯಿಂದ ಶ್ರಮಿಸಿದ್ದೇನೆ. ಪಕ್ಷದಲ್ಲಿ ಇತ್ತೀಚೆಗೆ ಗುರುತಿಸಿಕೊಂಡ ಕೆಲ ನಾಯಕರಿಗೆ ಆದ್ಯತೆ ನೀಡಲಾಗುತ್ತಿದೆ. ಹಿರಿಯ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಅದರಿಂದ ಪಕ್ಷ ತೊರೆಯುತ್ತಿದ್ದೇನೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ದೂರಿದರು.
ಪಕ್ಷದ ಜಿಲ್ಲಾ ಮುಖಂಡರ ಭಿನ್ನಾಭಿಪ್ರಾಯದಿಂದ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಪಕ್ಷ ಸಂಘಟನೆಗೆ ಹಿನ್ನಡೆಯಾಗಿದೆ ಎಂದರು.
ಬಿಜೆಪಿ ವತಿಯಿಂದ ಚಿಕ್ಕಮಗಳೂರಿನಲ್ಲಿ ಇದೇ 30ರಂದು ಏರ್ಪಡಿಸಿರುವ ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಜೆಡಿಎಸ್ ಮುಖಂಡ ಎಚ್.ಎನ್.ಮಂಜಯ್ಯ ಅವರೊಂದಿಗೆ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ಗಣೇಶ್, ಗಂಗಾಧರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.